ಡೆಂಗ್ಯೂ ಖಾಯಿಲೆ ನಿಯಂತ್ರಣಕ್ಕಾಗಿ ಜಾಗೃತಿ ಕಾರ್ಯಕ್ರಮ

Awareness program for dengue disease control

ಡೆಂಗ್ಯೂ ಖಾಯಿಲೆ ನಿಯಂತ್ರಣಕ್ಕಾಗಿ ಜಾಗೃತಿ ಕಾರ್ಯಕ್ರಮ 

ಕೊಪ್ಪಳ 05: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯ ಕೇಂದ್ರ ಯಲಬುರ್ಗಾ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉನ್ನತೀಕರಿಸಿದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಬಳೂಟಗಿ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 04 ರಂದು ಶಾಲೆಯ ಆವರಣದಲ್ಲಿ “ಡೆಂಗ್ಯೂ ಖಾಯಿಲೆ ನಿಯಂತ್ರಣ” ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ ಮಾತನಾಡಿ, ಡೆಂಗ್ಯೂ ಖಾಯಿಲೆ ಒಂದು ಮಾರಕರೋಗ. ಈಡಿಸ್ ಜಾತಿಯ ಸೋಂಕಿತ ಸೊಳ್ಳೆಯಿಂದ ಹರಡುತ್ತದೆ. ಪ್ರಸ್ತುತ ದಿನಗಳಲ್ಲಿ ಮಳೆಗಾಲ ಪ್ರಾರಂಭವಾದ ಕಾರಣ ಶುದ್ಧ ನೀರಿನಲ್ಲಿ ಸೋಂಕಿತ ಈಡಿಸ್ ಜಾತಿಯ ಸೊಳ್ಳೆಗಳು ಮೊಟ್ಟೆಗಳನ್ನಿಟ್ಟು ಸಂತಾನಾಭಿವೃದ್ಧಿ ಮಾಡುತ್ತವೆ. ನಂತರ ಮನುಷ್ಯರಿಗೆ ಕಚ್ಚುವುದರಿಂದ ಈ ಖಾಯಿಲೆ ಹರಡುತ್ತದೆ. ವಿಪರೀತ ಜ್ವರ, ತಲೆನೋವು, ವಾಂತಿ, ಕಣ್ಣಿನ ಹಿಂಭಾಗದಲ್ಲಿ ನೋವು, ಮೈಮೇಲೆ ಬಿಲ್ಲೆ ಆಕಾರದ ಕೆಂಪು ಗಂಧೆಗಳು, ಕಪ್ಪು ಮಲವಿಸರ್ಜನೆ, ವಸಡುಗಳಲ್ಲಿ ರಕ್ತಸ್ರಾವ ಇಂತಹ ಲಕ್ಷಣಗಳಿದ್ದರೆ ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟೀನೀಡಿ, ರಕ್ತ ಪರೀಕ್ಷೆ ಮಾಡಿಸಿ, ಚಿಕಿತ್ಸೆ ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಜ್ವರದ ಬಗ್ಗೆ ನಿರ್ಲಕ್ಷತನ ಮಾಡಬಾರದು. ಆದ್ದರಿಂದ ಶಾಲಾ ವಿದ್ಯಾರ್ಥಿಗಳಾದ ತಾವು ತಮ್ಮ ಶಾಲೆಗಳಲ್ಲಿ, ಮನೆಗಳಲ್ಲಿ, ನೀರು ಶೇಖರಿಸುವ ಡ್ರಮ್, ಬ್ಯಾರಲ್, ಸಿಮೆಂಟ್ ತೊಟ್ಟೆ, ಕಲ್ಲಿನದೋಣಿ ಇನ್ನಿತರ ನೀರು ಸಂಗ್ರಹ ಪರಿಕರಗಳನ್ನು ವಾರದಲ್ಲಿ 2 ಬಾರಿ ಸ್ವಚ್ಚವಾಗಿ ತೊಳೆದು. ಬಿಸಿಲಿನಲ್ಲಿ ಒಣಗಿಸಿ ಪುನಃ ನೀರು ತುಂಬಬೇಕು. ನೀರಿನ ಸಲಕರಣೆಗಳಿಗೆ ಸೊಳ್ಳೆ ಹೋಗದಂತೆ ಭದ್ರವಾಗಿ ಮುಚ್ಚಳದಿಂದ ಮುಚ್ಚಬೇಕು ಎಂದು ಹೇಳಿದರು. ಸಾಯಂಕಾಲ ವೇಳೆ ಮನೆಯ ಮುಂದೆ ಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಸೊಳ್ಳೆ ಕಡಿತದಿಂದ ದೂರವಿರಲು ವೈಯಕ್ತಿಕ ರಕ್ಷಣೆ ಮಾಡಿಕೊಳ್ಳಬೇಕು. ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಲಾರ್ವಾ ನಾಶಕ್ಕಾಗಿ ಸ್ವಚ್ಚಗೊಳಿಸುತ್ತಿರಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ತಮ್ಮ ಮನೆಗೆ ಭೇಟಿ ನೀಡಿದಾಗ ಸಹಕರಿಸಬೇಕು. ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ತಮ್ಮ ಮನೆಯ ಸುತ್ತ-ಮುತ್ತ ಘನ ತ್ಯಾಜ್ಯ ವಸ್ತುಗಳಾದ ಟೈರ್, ಒರಳುಕಲ್ಲು, ತೆಂಗಿನಚಿಪ್ಪು, ಒಡೆದ ಪ್ಲಾಸ್ಟಿಕ್ ಬಕೆಟ್ ಇತ್ಯಾದಿಗಳನ್ನು ಮನೆಯ ಮೇಲೆ ಮತ್ತು ಅಕ್ಕ-ಪಕ್ಕದಲ್ಲಿ ಬಿಸಾಡಬಾರದು. ಸ್ವಚ್ಚತೆ ಕಾಪಾಡಬೇಕು ಶಾಲಾ ಆವರಣದಲ್ಲಿ ಸೊಳ್ಳೆಗಳಿಂದ ಮುಕ್ತಿಹೊಂದಲು ಈಡಿಸ್ ಸೊಳ್ಳೆ ಉತ್ಪತ್ತಿ ರಹಿತ ಆವರಣ ನಾಮಫಲಕ ಹಾಕಬೇಕು ಹಾಗೂ ಪ್ರತಿ ಶುಕ್ರವಾರ ಡೆಂಗಿ ನಿಯಂತ್ರಣ ಅಭಿಯಾನದ ಅಂಗವಾಗಿ ಒಣಗಿದ ದಿನ ಆಚರಿಸಲಾಗುತ್ತದೆ ಎಂದು ತಿಳಿಸಿದರು.  ಮಲೇರಿಯಾ ತಾಂತ್ರಿಕ ಮೇಲ್ವಿಚಾರಕ ಮಂಜುನಾಥ ಮಾತನಾಡಿ, ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳು ಮತ್ತು ಅವುಗಳ ನಿಯಂತ್ರಣ, ಮುಂಜಾಗ್ರತೆ ಕುರಿತು ವಿವರವಾಗಿ ಮಾತನಾಡಿದರು. ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಬಸವರಾಜ ಕೋವಿಡ್‌-19 ಖಾಯಿಲೆ ಕುರಿತು, ವಿದ್ಯಾರ್ಥಿಗಳು ಮತ್ತು ಶಾಲಾ ಶಿಕ್ಷಕರು ಅನುಸರಿಸಬೇಕಾದ ಕ್ರಮಗಳ ಕುರಿತು ವಿವರವಾಗಿ ಮಾತನಾಡಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರಾಜೇಶ್ವರಿ ಮಾತನಾಡಿ, ಕ್ಷಯರೋಗ ನಿರ್ಮೂಲನೆ, ಕುಷ್ಠರೋಗ ನಿರ್ಮೂಲನೆ ಹಾಗೂ ಹದಿ-ಕರೆಯದವರ ಆರೋಗ್ಯ ರಕ್ಷಣೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಪರಸಪ್ಪ ಶಾಡಲಗೇರಿ, ಫಾರ್ಮಸಿ ಅಧಿಕಾರಿಗಳಾದ ವಿಶ್ವಾರಾಧ್ಯ, ಸಹ-ಶಿಕ್ಷಕರು, ಆಶಾ ಕಾರ್ಯಾಕರ್ತೆಯರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.