ಬೇಸಿಗೆಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧ-ಇಂಧನ ಸಚಿವ ಕೆ.ಜೆ.ಜಾರ್ಜ್‌

Energy Department ready for 19 thousand megawatt power supply in summer - Energy Minister KJ George

ಬೇಸಿಗೆಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧ-ಇಂಧನ ಸಚಿವ ಕೆ.ಜೆ.ಜಾರ್ಜ್‌

ಹಾವೇರಿ 17:   ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ  ಏಪ್ರಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ. ಬಳಿಕ  ಬಹುತೇಕ ಸಮಸ್ಯೆಗಳು ಬಗೆಹರಿಯಲಿವೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ತಿಳಿಸಿದರು. ಜಿಲ್ಲಾ ಪಂಚಾಯಿತ್ ಸಭಾಂಗಣದಲ್ಲಿ ಸೋಮವಾರ  ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರೀಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ವರ್ಷ ತೀವ್ರ ಬರಗಾಲ ಇದ್ದುದರಿಂದ ವಿದ್ಯುತ್ ಕೊರತೆಯಿದ್ದರೂ, ಕೇವಲ ಒಂದು ತಿಂಗಳು ಮಾತ್ರ ಸಮಸ್ಯೆಯಾಗಿತ್ತು. ಉಳಿದ 11 ತಿಂಗಳಿನಲ್ಲಿ ಸಮರ​‍್ಕವಾಗಿ ವಿದ್ಯುತ್ ಪೂರೈಸಲಾಗಿದೆ ಎಂದರು.ಪ್ರಸ್ತಕ ವರ್ಷ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದ್ದು, ಬೇರೆ ಬೇರೆ ರಾಜ್ಯ ಹಾಗೂ  ಕೇಂದ್ರದಿಂದ  ವಿದ್ಯುತ್ ಖರೀದಿಸಲಾಗಿದ್ದು, ಗ್ರಾಹಕರಿಗೆ ಸಮರ​‍್ಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ. ರಾಜ್ಯದಲ್ಲಿ ಯಾವುದೇ ವಿದ್ಯುತ್ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು. ಜನಪ್ರತಿನಿಧಿಗಳ ಸಲಹೆ ಪಡೆಯಿರಿ: ಜನರು ತಮ್ಮ ತೊಂದರೆಗಳನ್ನು ಜನಪ್ರತಿನಿಧಿಗಳ ಬಳಿ ಹೇಳಿಕೊಳ್ಳುತ್ತಾರೆ. ಜತೆಗೆ ಜನಪ್ರತಿನಿಧಿಗಳಲ್ಲಿಯೂ ಕ್ಷೇತದ ಸಮಸ್ಯೆ ಬಗೆಹರಿಸಲು ಸಾಕಷ್ಟು ಯೋಚನೆಗಳಿರುತ್ತವೆ. ಆದ್ದರಿಂದ ಅವರನ್ನು ಭೇಟಿಯಾಗಿ ಸಲಹೆಗಳನ್ನು ಪಡೆಯಿರಿ. ತೊಂದರೆಗಳಿದ್ದರೆ ನಿಮ್ಮ ವ್ಯಾಪ್ತಿಯಲ್ಲಿ ಸರಿ ಪಡಿಸಿ, ಇಲ್ಲವೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೆ ತನ್ನಿ. ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.ಕುಸುಮ್ ಬಿ ಯೋಜನೆಗೆ ಆದ್ಯತೆ: ಕೃಷಿ ಪಂಪ್‌ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸೋಲಾರ್ ಪಂಪ್ ಸೆಟ್ ಒದಗಿಸುವ ಕುಸುಮ್‌-ಬಿ ಯೋಜನೆಗೆ ಸರ್ಕಾರ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಸಬ್ಸಿಡಿಯನ್ನು ಶೇ. 50ಕ್ಕೆ ಹೆಚ್ಚಿಸಿದ್ದು, ಕೇಂದ್ರ ಸರ್ಕಾರ ಶೇ. 30ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಕೇವಲ ಶೇ.20 ಮಾತ್ರ ಹಣ ಪಾವತಿಸಿ ಸೋಲಾರ್ ಪಂಪ್ ಸೆಟ್ ಪಡೆಯಬಹುದು. ಈ ಯೋಜನ ರೈತರಿಗೆ ವರದಾನವಾಗಲಿದೆ ಎಂದು ಹೇಳಿದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಿ ಮೂಲ ಸೌಕರ್ಯ ಒದಗಿಸಿದೆ. ಉಳಿದ ಅಕ್ರಮ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಹೊಸದಾಗಿ ಬಂದ ಅಕ್ರಮ-ಸಕ್ರಮ ಅರ್ಜಿಗಳ ಕುರಿತು ನಂತರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಹಾವೇರಿ ಕ್ಷೇತ್ರದ ಶಾಸಕ  ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರ​‍್ಪ ಲಮಾಣಿ ಅವರು ನೆಗಳೂರಿನಲ್ಲಿ 110 ಕೆ.ವಿ. ಸಾಮರ್ಥ್ಯದ ಸ್ಟೆಷನ್ ಪ್ರಾರಂಭಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಎರಡು ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಮಾತನಾಡಿ, ಅಧಿಕ ಒತ್ತಡದಿಂದ ಟ್ರಾನ್ಸ್‌ ಫಾರ್ಮರ್‌ಗಳು ಸುಡುತ್ತಿವೆ. ಆದ್ದರಿಂದ ಅವುಗಳನ್ನು ಮೇಲ್ದರ್ಜೆಗೇರಿಸಬೇಕು. ಸುಟ್ಟು ಹೋದ ಟ್ರಾನ್‌ಫಾರ್ಮರ್‌ಗಳನ್ನು ತುರ್ತಾಗಿ  ಬದಲಿಸಬೇಕು ಎಂದು ಮನವಿ ಮಾಡಿದರು.  ಹಿರೇಕೆರೂರು ಶಾಸಕ ಯು.ಬಿ ಬಣಕಾರ ಮಾತನಾಡಿ,  ಕೃಷಿಪಂಪ್ ಸೆಟ್‌ಗಳಿಗೆ ದಿನದ ಏಳು ಗಂಟೆ ನಿರಂತರ ವಿದ್ಯುತ್ ಪೂರೈಸಬೇಕು. ಕೆಲವು ಕಡೆ ಹಳೆಯದಾಗಿರುವ ವಿದ್ಯುತ್ ಲೈನ್‌ಗಳನ್ನು ಬದಲಿಸಬೇಕು ಎಂದು ಮನವಿ ಮಾಡಿದರು.ಶಾಸಕರ ಅಹಾಲುಗಳನ್ನು ಆಲಿಸಿದ  ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಪ್ರತಿಕ್ರಿಯಿಸಿ, ಈ ಎಲ್ಲಾ ವಿಚಾರಗಳ ಬಗ್ಗೆ  ಸೂಕ್ತ ಕ್ರಮ ಕೈಗೊಳ್ಳುವಂತೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶರಿಗೆ ಸೂಚಿಸಿದರು. ಜತೆಗೆ ಸಕ್ಕರೆ ಕಾರ್ಖಾನೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಬಗ್ಗೆ ವರದಿ ಪಡೆದು  ಸೂಕ್ತ ಕ್ರಮ ಜರುಗಿಸುವಂತೆಯೂ ತಾಕೀತು ಮಾಡಿದರು. ಸಭೆಯಲ್ಲಿ ಬ್ಯಾಡಗಿ ಶಾಸಕರೂ ಆದ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ ಅಜೀಮ್‌ಪೀರ ಖಾದ್ರಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್‌.ಆರ್‌.ಪಾಟೀಲ, ಪ್ರಕಾಶ ಕೋಳಿವಾಡ,  ಯಾಸಿರ್ ಅಹ್ಮದ್‌ಖಾನ್ ಪಠಾಣ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ವೈಶಾಲಿ ಎಂ.ಎಲ್, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ  ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.