ಕೊಪ್ಪಳ: ಆಯೋಗದ ಮಾರ್ಗಸೂಚಿಯಂತೆ ಮತದಾನಕ್ಕೆ ಸಿದ್ದತೆಗೊಳಿಸಲು ಸೆಕ್ಟರ್ ಅಧಿಕಾರಿಗಳಿಗೆ ಸೂಚನೆ

ಕೊಪ್ಪಳ 20: ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 23 ರಂದು ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ಸೆಕ್ಟರ್ ಅಧಿಕಾರಿಗಳ ಪಾತ್ರ ಬಹಳ ಪ್ರಮುಖವಾಗಿದ್ದು ಆಯೋಗದ ನಿದರ್ೇಶನದಂತೆ ಕೆಲಸ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದರು. 

ಅವರು (ಏ.20) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೆ ನೇಮಕವಾಗಿರುವ ಚುನಾವಣಾ ಸೆಕ್ಟರ್ ಅಧಿಕಾರಿಗಳಿಗೆ ಏರ್ಪಡಿಸಲಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಸ್ಟರಿಂಗ್ ದಿನಕ್ಕಿಂತ ಮುಂಚೆ ಕೈಗೊಳ್ಳಬೇಕಾದ ಸಿದ್ದತೆ ಮತ್ತು ಮಸ್ಟರಿಂಗ್ ದಿನ ಕೈಗೊಳ್ಳಬೇಕಾದ ಸಿದ್ದತೆಯನ್ನು ಕೂಲಂಕುಷವಾಗಿ ಪರಿಶೀಲಿಸಿಟ್ಟುಕೊಳ್ಳಬೇಕು. ಸೆಕ್ಟರ್ ಅಧಿಕಾರಿಗಳು ಮತಗಟ್ಟೆಗೆ ಹೋಗುವ ಮುನ್ನ ಮಸ್ಟರಿಂಗ್ ದಿನ ಮತದಾನ ಸಿಬ್ಬಂದಿಗಳು ಹೊಂದಬೇಕಾದ ವಿವಿಧ ನಮೂನೆಗಳು, ಸಾಮಾಗ್ರಿಗಳು ಹಾಗೂ ಶಾಸನ ಬದ್ದ ಲಕೋಟೆ ಮತ್ತು ಶಾಸನಬದ್ದವಲ್ಲದ ಲಕೋಟೆಗಳನ್ನು ಹೊಂದಿರುವ ಬಗ್ಗೆ ಮತ್ತು ಚೆಕ್ಲೀಸ್ಟ್ಗಳ ವಿವರಗಳು ಇರುವುದರ ಬಗ್ಗೆ ಸಂಪೂರ್ಣವಾಗಿ ಖಚಿತಪಡಿಸಿಕೊಳ್ಳಬೇಕು. ಈ ಬಗ್ಗೆ ಎಲ್ಲಾ ಮುಂಜಾಗ್ರತೆಯನ್ನು ಸೆಕ್ಟರ್ ಅಧಿಕಾರಿಗಳು ಮಾಡಬೇಕಾಗುತ್ತದೆ ಎಂದರು. 

ಮತದಾನ ದಿನ ಎಲ್ಲಾ ಸೆಕ್ಟರ್ ಅಧಿಕಾರಿಗಳು ಮತದಾನಕ್ಕೂ ಮುಂಚಿತವಾಗಿ ಎಲ್ಲಾ ಮತಗಟ್ಟೆಗಳಲ್ಲಿ ಮಾಕ್ ಪೋಲ್ಗೆ ಸಿದ್ದತೆ ಮಾಡಿಕೊಂಡಿರುವ ಬಗ್ಗೆ ಪರಿಶೀಲಿಸಬೇಕು. ತಾವುಗಳು ಎಲ್ಲಾ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆ ಅಧಿಕಾರಿಗಳಿಗೆ ಈ ಬಗ್ಗೆ ಸಂಪೂರ್ಣವಾಗಿ ಮಾರ್ಗದರ್ಶನ ನೀಡುವ ಜವಾಬ್ದಾರಿ ನಿಮ್ಮದಾಗಿರುತ್ತದೆ. ಯಾವುದೇ ಸಮಸ್ಯೆಗಳು ಎದುರಾದರೂ ಸಮರ್ಥವಾಗಿ ಎದುರಿಸಲು ಸಿದ್ದರಾಗಿರಬೇಕು. ವಿದ್ಯುನ್ಮಾನ ಯಂತ್ರಗಳನ್ನು ಸರಿಯಾಗಿ ಜೋಡಿಸಲಾಗಿದೆಯೇ ಮತ್ತು ಮಾಕ್ ಪೋಲ್ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮ ಹಾಗೂ ನಂತರದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಎಲ್ಲಾ ಪರಿಶೀಲನೆ ನಡೆಸಲು ಮತಗಟ್ಟೆ ಅಧಿಕಾರಿಗಳಿಂದ ಖಚಿತಪಡಿಸಿಕೊಳ್ಳಬೇಕು. ಸಹಾಯಕ್ಕಾಗಿ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳು ಮತ್ತು ಇಂಜಿನಿಯರ್ಗಳು ಲಭ್ಯರಿರುತ್ತಾರೆ. ಏಪ್ರಿಲ್ 23 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು ಈ ಅವಧಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ನೀಡದೇ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದರು. 

ಮತಗಟ್ಟೆ ವ್ಯಾಪ್ತಿಯಲ್ಲಿ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಮತದಾರರನ್ನು ಹೊರತುಪಡಿಸಿ ಇತರೆ ಯಾರಿಗೂ ಈ ವ್ಯಾಪ್ತಿಯಲ್ಲಿ ಇರಲು ಅವಕಾಶ ಇರಬಾರದು. ಮತ್ತು 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು ಈ ವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಚಟುವಟಿಕೆಗಳು ಸಹ ನಡೆಯದಂತೆ ನೋಡಿಕೊಳ್ಳಬೇಕು ಎಂದರು. 

ಹೆಲ್ಪ್ ಡೆಸ್ಕ್: ಒಂದಕ್ಕಿಂತ ಹೆಚ್ಚು ಮತಗಟ್ಟೆಗಳನ್ನು ಹೊಂದಿರುವ ಕಟ್ಟಡಗಳಲ್ಲಿ ಹೆಲ್ಪ್ಡೆಸ್ಕ್ಗಳನ್ನು ಸ್ಥಾಪಿಸಿ ಮತದಾರರಿಗೆ ಮಾರ್ಗದರ್ಶನ ನೀಡಬೇಕು, ಇದಕ್ಕಾಗಿ ಬಿ.ಎಲ್.ಓ.ಗಳನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಮತ್ತು ಕಾಲ ಕಾಲಕ್ಕೆ ಮತದಾನದ ಅಂಕಿ ಅಂಶಗಳನ್ನು ಸಹಾಯಕ ಚುನಾವಣಾಧಿಕಾರಿಗಳಿಗೆ ನೀಡುವ ಜವಾಬ್ದಾರಿ ನಿಮ್ಮದಾಗಿದ್ದು ಯಾವುದೇ ಕಾರಣಕ್ಕೂ ಮೊಬೈಲ್ ಸ್ವಿಚ್ ಆಫ್ ಮಾಡದಂತೆ ಎಚ್ಚರವಹಿಸಬೇಕೆಂದು ಸೂಚನೆ ನೀಡಿ ಮತದಾನ ಪೂರ್ವ ಮತ್ತು ಮುಕ್ತಾಯದ ನಂತರ ಕೈಗೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ಚಾಚು ತಪ್ಪದೇ ಪಾಲನೆ ಮಾಡಬೇಕೆಂದರು. 

ಅಪರ ಜಿಲ್ಲಾಧಿಕಾರಿ ಬಾಲಚಂದ್ರ, ಪ್ರೊಬೇಷನರಿ ಐಪಿಎಸ್ ಅಧಿಕಾರಿಗಳು ಉಪಸ್ಥಿತರಿದ್ದರು.