ಬಾಲ್ಯ ವಿವಾಹ ಮುಕ್ತ ತಾಲ್ಲೂಕಾಗಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ : ವಿಶ್ವನಾಥ ಮುರಡಿ
ಕೊಪ್ಪಳ 05: ಬಾಲ್ಯವಿವಾಹ ಮುಕ್ತ ತಾಲೂಕನ್ನಾಗಿಸಲು ತಾಲೂಕಿನ ಎಲ್ಲಾ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕನಕಗಿರಿ ತಹಶೀಲ್ದಾರರಾದ ವಿಶ್ವನಾಥ ಮುರಡಿ ಅವರು ಹೇಳಿದರು. ಜೂನ್ 04 ರಂದು ಕನಕಗಿರಿ ತಹಶೀಲ್ದಾರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಬಾಲ್ಯವಿವಾಹ ತಡೆ ಮತ್ತು ಸಮನ್ವಯ ಸಮಿತಿ, ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆ ಸಮಿತಿ ಹಾಗೂ ಮಕ್ಕಳ ರಕ್ಷಣಾ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ್ಯವಿವಾಹ ಮುಕ್ತ ತಾಲೂಕನ್ನಾಗಿಸಲು ತಾಲೂಕಿನ ಎಲ್ಲಾ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು . ಸರ್ವೋಚ್ಛ ನ್ಯಾಯಾಲಯದ ರಿಟ್ ಸಂ: 1234/2017 ರಲ್ಲಿ ಬಾಲ್ಯವಿವಾಹ ತಡೆಗಟ್ಟುವಲ್ಲಿ ನಿರ್ಲಕ್ಷತೆಯನ್ನು ತೋರುವ ಯಾವುದೇ ಬಾಲ್ಯವಿವಾಹ ನಿಷೇಧಾಧಿಕಾರಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 199(ಸಿ) ರನ್ವಯ ಪ್ರಕರಣವನ್ನು ದಾಖಲಿಸುವಂತೆ ನಿರ್ದೇಶಿಸಿದೆ. ಆದ್ದರಿಂದ ಬಾಲ್ಯವಿವಾಹ ಪ್ರಕರಣಗಳು ಇದ್ದಲ್ಲಿ ಸಂವೇದನಾಶೀಲರಾಗಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ತಪ್ಪಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಸಾಮೂಹಿಕ ವಿವಾಹ ಆಯೋಜಕರು ಕಡ್ಡಾಯವಾಗಿ ತಹಶೀಲ್ದಾರರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಸಾಮೂಹಿಕ ವಿವಾಹ ಆಯೋಜನೆಗೆ ಅನುಮತಿಯನ್ನು ಪಡೆದುಕೊಂಡ ನಂತರವೇ ಸಾಮೂಹಿಕ ವಿವಾಹಗಳನ್ನು ಆಯೋಜಿಸತಕ್ಕದ್ದು. ತಪ್ಪಿದಲ್ಲಿ, ಬಾಲ್ಯವಿವಾಹ ಜರುಗಿದ್ದು ಕಂಡುಬಂದಲ್ಲಿ, ಸಾಮೂಹಿಕ ವಿವಾಹ ಆಯೋಜಕರು ಸೇರಿದಂತೆ ಸಂಬಂಧಿಸಿದ ಎಲ್ಲರ ವಿರುದ್ಧ ಪ್ರಕರಣವನ್ನು ದಾಖಲಿಸುವಂತೆ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಸೂಚಿಸಿದರು.ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಬಾಲ್ಯವಿವಾಹಕ್ಕೆ ಪ್ರಯತ್ನಿಸಿದಲ್ಲಿ ಅದು ಸಹ ಅಪರಾಧವಾಗಿದ್ದು, ಇನ್ನು ಮುಂದೆ ಬಾಲ್ಯವಿವಾಹ ಮಾಡಲು ಪ್ರಯತ್ನಿಸಿದರೂ ಕೂಡ ಪ್ರಕರಣವನ್ನು ದಾಖಲಿಸುವಂತೆ ಸೂಚಿಸಿದ್ದು, ಈ ಕುರಿತು ತಾಲೂಕಿನ ವ್ಯಾಪ್ತಿಯ ಎಲ್ಲಾ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಕ್ರಮವಹಿಸತಕ್ಕದ್ದು ಎಂದು ಸೂಚಿಸಿದರು.ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಕ್ಕಳ ಸ್ನೇಹಿ ವಾತಾವರಣ ಮತ್ತು ಮಕ್ಕಳ ಪರವಾದ ಪಂಚಾಯತ್ಗಳನ್ನಾಗಿಸಲು ಪ್ರತಿ ಗ್ರಾಮ ಪಂಚಾಯತ್ಗಳಲ್ಲಿ ಕನಿಷ್ಠ 03 ತಿಂಗಳಿಗೊಮ್ಮೆ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಗಳ ಸಭೆಯನ್ನು ಕಡ್ಡಾಯವಾಗಿ ಆಯೋಜಿಸಿ ವರದಿಯನ್ನು ತಾಲೂಕು ಪಂಚಾಯತ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕರಾರಿಗಳಿಗೆ ಸಲ್ಲಿಸಬೇಕು. ಮಕ್ಕಳ ಸುರಕ್ಷತೆಗಾಗಿ ಸರಕಾರವು ಮಕ್ಕಳ ರಕ್ಷಣಾ ನೀತಿ-2016 ಪರಿಷ್ಕರಣೆ-2023ನ್ನು ಜಾರಿಗೆ ತಂದಿದ್ದು, ಅದರನ್ವಯ ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಮಕ್ಕಳ ಸುರಕ್ಷತಾ ಸಮಿತಿ, ಪೋಷಕರ ಸಮಿತಿಗಳನ್ನು ರಚಿಸಿ ನಿಯಮಿತವಾಗಿ ಸಭೆಯನ್ನು ಆಯೋಜಿಸಬೇಕು. ಮಕ್ಕಳ ಸಹಾಯವಾಣಿ-1098-112 ರ ಬಗ್ಗೆ ಶಾಶ್ವತ ಗೋಡೆ ಬರಹಗಳನ್ನು ಬರೆಯಿಸಬೇಕು. ಮಕ್ಕಳ ಸಲಹಾ ಪೆಟ್ಟಿಗೆಯನ್ನು ಸ್ಥಾಪಿಸಿ ನಿಯಮಿತವಾಗಿ ಪರೀಶೀಲಿಸಬೇಕು. ಅನುದಾನಿತ ಮತ್ತು ಅನುದಾನರಹಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಪೊಲೀಸ್ ಪರೀಶೀಲನೆ ಕಡ್ಡಾಯವಾಗಿದೆ ಎಂದು ತಹಶೀಲ್ದಾರರು ತಿಳಿಸಿದರು. ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನವನ್ನು ಚಲಾಯಿಸಲು ನೀಡುವುದು ಸಹ ಮೋಟಾರು ವಾಹನ ಕಾಯ್ದೆಯನ್ವಯ ಅಪರಾಧವಾಗಿದೆ. ಆದ್ದರಿಂದ 18 ವರ್ಷದೊಳಗಿನ ಮಕ್ಕಳಿಗೆ ವಾಹನ ಚಾಲನೆಗೆ ಅವಕಾಶ ನೀಡಬೇಡಿ ಎಂದು ಸಮುದಾಯದಲ್ಲಿ ಪ್ರಚುರಪಡಿಸುವಂತೆ ಮತ್ತು ಒಂದು ವೇಳೆ ಈ ರೀತಿಯಲ್ಲಿ ಘಟನೆಗಳು ಕಂಡುಬಂದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ವಿರುಪಾಕ್ಷಿ ಅವರು ಮಾತನಾಡಿ, ಯೋಜನಾ ವ್ಯಾಪ್ತಿಯಲ್ಲಿ ದೈಹಿಕವಾಗಿ ಅಸ್ವಸ್ಥ ಮಗುವಿಗೆ ಗುಣಮುಖವಾಗಲೆಂದು ಬರೆಯನ್ನು ಹಾಕಿದ್ದು, ಅದರಿಂದಾಗಿ ಮಗು ಮೃತಪಟ್ಟ ಪ್ರಕರಣವು ಕನಕಗಿರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುತ್ತದೆ. ಈ ರೀತಿಯ ಪ್ರಕರಣಗಳು ಪುನರಾವರ್ತನೆಯಾಗದಂತೆ ಜಿಲ್ಲಾಧಿಕಾರಿಗಳು ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿಗಳಲ್ಲಿ ಮತ್ತು ಸಮುದಾಯದಲ್ಲಿ ಜಾಗೃತಿಯನ್ನು ಮೂಡಿಸುವಂತೆ ಹಾಗೂ ಈ ರೀತಿಯ ಪ್ರಕರಣಗಳು ಕಂಡುಬಂದಲ್ಲಿ ವೈದ್ಯಾಧಿಕಾರಿಗಳು ಪೊಲೀಸ್ ಅಧಿಕಾರಿಗಳಿಗೆ ಎಮ್.ಎಲ್.ಸಿಯನ್ನು ನೀಡುವಂತೆ ಸೂಚಿಸಿದ್ದಾರೆಂದು ಸಭೆಗೆ ತಿಳಿಸಿದರು.
2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆದ ಫಲಾನುಭವಿಗಳಿಗೆ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಪರಿಪಕ್ವ ಮೊತ್ತಕ್ಕಾಗಿ 457 ಫಲಾನುಭವಿಗಳು ಅರ್ಹರಿದ್ದು, 399 ಫಲಾನುಭವಿಗಳಿಗೆ ಭಾರತೀಯ ಜೀವವಿಮಾ ನಿಗಮದಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಅನುದಾನವು ಜಮೆಯಾಗಿರುತ್ತದೆಂದು ಸಭೆಗೆ ವಿವರಿಸಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಶೇಖರ್, ಆರೋಗ್ಯ ನೀರೀಕ್ಷಣಾಧಿಕಾರಿ ರಮೇಶ, ಸಮಾಜಕಾರ್ಯಕರ್ತರಾದ ರವಿಕುಮಾರ ಪವಾರ, ಸಾಂತ್ವನ ಸಹಾಯವಾಣಿ ಕೇಂದ್ರದ ಆಪ್ತಸಮಾಲೋಚಕಿ ನಿರ್ಮಲಾ, ಅಂಗನವಾಡಿ ಮೇಲ್ವಿಚಾರಕಿಯರು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.