ಧಾರವಾಡ 11: ನಗರದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗುವುದು. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು (ಜೂ.11) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಯೋಗವು ಬಹು ಮುಖ್ಯವಾಗಿದ್ದು, ಈ ಕಾರ್ಯಕ್ರಮಕ್ಕೆ ಹೆಚ್ಚು ಸಾರ್ವಜನಿಕರು ಭಾಗವಹಿಸುವುದು ಮುಖ್ಯವಾಗಿದೆ. ಅಂದು ಬೆಳಿಗ್ಗೆ 6 ಕ್ಕೆ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಒಂದು ಸಾವಿರ ಯೋಗಪಟುಗಳು ಭಾಗವಹಿಸುವರು. ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಸಲಾಗುವುದು. ಇದಕ್ಕೆ ಬೇಕಾದ ಸಿದ್ಧತೆಯನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಯೋಗದಲ್ಲಿ ಭಾಗವಹಿಸುವವರು ಟೀ ಶರ್ಟ್ ಮತ್ತು ಟ್ರ್ಯಾಕ್ ಪ್ಯಾಂಟ್ ಧರಿಸಿರಬೇಕು. ಯೋಗ ಮ್ಯಾಟ್ ಅವರೇ ತರಬೇಕು. ಜೂನ 20 ರವರೆಗೆ ನಗರದ ವಿವಿಧ ಪ್ರದೇಶಗಳಲ್ಲಿ ಯೋಗ ಪೂರ್ವಾಭ್ಯಾಸ ನಡೆಯಲಿದ್ದು, ಆಸಕ್ತರು ಭಾಗವಹಿಸಬಹುದು ಎಂದು ಹೇಳಿದರು.
ನಗರದ, ಯೋಗ ಫೆಡರೇಷನ್, ಯೋಗ ಒಕ್ಕೂಟ, ಯೋಗ ತರಬೇತಿ ಸಂಸ್ಥೆ, ಎನ್.ಸಿ.ಸಿ, ಎನ್.ಎಸ್.ಎಸ್ ಹಾಗೂ ಶಾಲಾ ಕಾಲೇಜುಗಳಿಂದ ಜನರು ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಅವರು ತಿಳಿಸಿದರು.
ಯೋಗ ನಡೆಯುವ ಸ್ಥಳದಲ್ಲಿ ಆಂಬುಲೆನ್ಸ್, ಫೈಯರ್, ಕುಡಿಯುವ ನೀರು ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಒದಗಿಸಬೇಕು. ಮಹಾನಗರ ಪಾಲಿಕೆಯಿಂದ ಸ್ವಚ್ಚತೆ ಹಾಗೂ ನೀರಿನ ವ್ಯವಸ್ಥೆ ಹಾಗೂ ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳವಂತೆ ಅವರು ತಿಳಿಸಿದರು.
ಯೋಗ ದಿನಾಚರಣೆ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಕ್ವೀಜ್ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲು ಮತ್ತು ಅದರಲ್ಲಿ ಭಾಗವಹಿಸಿದವರಿಗೆ ಸರ್ಟಿಫಿಕೇಟ್ ನೀಡುವಂತೆ ಅಪರ ಜಿಲ್ಲಾಧಿಕಾರಿಗಳು ಹೇಳಿದರು.
ಯೋಗ ಸಂಗಮ ಕಾರ್ಯಕ್ರಮದಡಿ ಧಾರವಾಡ ತಾಲೂಕಿನ ತೇಗೂರ, ನಿಗದಿ ಮತ್ತು ನವಲಗುಂದ ತಾಲೂಕಿನ ಶಿರೂರ ಗ್ರಾಮಗಳ ಆಯುಷ್ಮಾನ ಆರೋಗ್ಯ ಮಂದಿರಗಳಲ್ಲಿ ಸ್ಥಳೀಯ ಸಂಘ, ಸ್ಥಂಸ್ಥೆಗಳ ಸಹಯೋಗದಲ್ಲಿ ಜೂ.12 ರಿಂದ 21 ರವರೆಗೆ ಪ್ರತಿ ದಿನ ಬೆಳಿಗ್ಗೆ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಭಾಗವಹಿಸಬೇಕು ಎಂದು ಅವರು ತಿಳಿಸಿದರು.
ಧಾರವಾಡ ನಗರದ ಕೆಲಗೇರಿ ಕೆರೆ ದಡದಲ್ಲಿ ಜೂ.12 ರಿಂದ 21 ರವರೆಗೆ ಪ್ರತಿ ದಿನ ಬೆಳಿಗ್ಗೆ ಯೋಗಧ್ಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಗಣೇಶ ಕದಂ ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. ಡಾ. ಶಶಿಧರ ಅವರು ಯೋಗ ದಿನಾಚರಣೆಯ ಅಂಗವಾಗಿ ಆಯೋಜಿಸುವ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ಡಿಎಚ್ಓ ಡಾ.ಹೋನಕೇರಿ, ಮಹಾನಗರಪಾಲಿಕೆ ವಲಯ ಸಹಾಯಕ ಆಯುಕ್ತ ಅರವಿಂದ ಜಮಖಂಡಿ, ಆಯುಷ್ ಕಾಲೇಜುಗಳ ಮುಖ್ಯಸ್ಥರು, ಕೆ.ಎಂ.ಎಫ್ ಅಧಿಕಾರಿಗಳು, ಪತಂಜಲಿ ಯೋಗ ಸಮಿತಿ, ಭಾರತ ಸೇವಾ ದಳ, ಶಾಲಾ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.