ಅನುಭವ ಮಂಟಪ-ಬಸವಾದಿ ಶರಣರ ವೈಭವ ಽ ಶೃಂಗಾರಗೊಂಡ ಕೂಡಲಸಂಗಮ
ಬಾಗಲಕೋಟೆ 28: ಕೂಡಲಸಂಗಮದಲ್ಲಿ ಎಪ್ರೀಲ್ 29 ಮತ್ತು 30 ರಂದು ಹಮ್ಮಿಕೊಳ್ಳಲಾದ ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮಕ್ಕೆ ಸಕಲ ರೀತಿಯಿಂದ ಸಜ್ಜುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.
ಕೂಡಲಸಂಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಸಿದ್ದತೆ ಕುರಿತು ಮಾತನಾಡಿದ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಹಾಗೂ ಕೂಡಲಸಂಗಮ ಅಭಿವೃದ್ದಿ ಪ್ರಾಧಿಕಾರದ ಸಹಯೋಗದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಎರಡು ದಿನಗಳ ಕಾಲ ಸಾಂಸ್ಕೃತಿ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅನುಭವ ಮಂಟದಲ್ಲಿ ವೇದಿಕೆ ಕಾರ್ಯಕ್ರಮ ಸಜ್ಜುಗೊಳಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮ ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಸ್ವಾಗತ ಮತ್ತು ಶಿಷ್ಟಾಚಾರ ಸಮಿತಿ, ಹಣಕಾಸು, ಸಾರಿಗೆ, ವಸತಿ, ಆಹಾರ, ಮೂಲಭೂತ ಸೌಲಭ್ಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಮತ್ತು ನೈರ್ಮಲೀಕರಣ, ಕಾನೂನು ಸುವ್ಯವಸ್ಥೆ, ವೇದಿಕೆ ಸಮಿತಿ ಸೇರಿದಂತೆ ಒಟ್ಟು 11 ಸಮಿತಿಗಳನ್ನು ರಚಿಸಲಾಗಿದೆ. ವೇದಿಕೆ ಕಾರ್ಯಕ್ರಮ ನಡೆಯುವ ಬಸವ ಮಂಟಪದದ ಹೊರಗಡೆ ಶಾಮಿಯಾನ ಹಾಕಿ ಎಲ್ಇಡಿ ಪರದೆಯ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದ ವೀಕ್ಷಣೆಗೆ ಬರುವ ಜನರಿಗೆ ದಾಸೋಹ ಭವನದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಲು ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಎಪ್ರೀಲ್ 29 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ವರೆಗೆ ವಚನ ಸಾಹಿತ್ಯ ಸಮಕಾಲಿನ ಸಂವೇದನೆ ಕುರಿತು ವಿಚಾರಗೋಷ್ಠಿ ನಡೆಯಲಿದ್ದು, ವಿಚಾರಗೋಷ್ಠಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಚಾಲನೆ ನೀಡಲಿದ್ದಾರೆ. ಅಬಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಸಂಜೆ ಸಂಗೀತ, ಸಮೂಹ ನೃತ್ಯ, ಭರತನಾಟ್ಯ, ವಚನಗಾಯನ, ನೃತ್ಯ ರೂಪಕ, 3ಡಿ ಬಸವನೃತ್ಯ ಹಾಗೂ ನಾಟಕ ಪ್ರದರ್ಶನಗೊಳ್ಳಲಿವೆ ಎಂದರು.
ಬಸವ ಜಯಂತಿ ಎಪ್ರೀಲ್ 30 ರಂದು ಮುಖ್ಯಮಂತ್ರಿಗಳು ಆಗಮಿಸಲಿದ್ದು, ಕಾರ್ಯಕ್ರಮವನ್ನು ಉದ್ಘಾಟಿಸಿ ಬಸವ ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಸಂಜೆ ಹಂಸಲೇಖ ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ಜರುಗಲಿದೆ. ಅಲ್ಲದೇ ಡಾಲಿ ಧನಂಜಯ ಮತ್ತು ಎಂ.ಡಿ ಪಲ್ಲವಿ ಅವರಿಂದ ಸಂಗೀತ ಕಾರ್ಯಕ್ರಮ ಸಹ ನಡೆಯಲಿದೆ. ಕಾರ್ಯಕ್ರಮಕ್ಕೆ ಸಾಹಿತಿಗಳು, ಕಲಾ ಆಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಸೇರಿದಂತೆ ವಿವಿಧ ಸಮಿತಿ ಅಧ್ಯಕ್ಷರು ಸದಸ್ಯರು ಇದ್ದರು.