ಹಾವೇರಿ 12 : ಇಲ್ಲಿನ ಎಸ್.ಪಿ ಬಿ ಶ್ರೀಕಂಠಪ್ಪ ಬಡಾವಣೆಯಲ್ಲಿ ಅಪೂರ್ಣಗೊಂಡ ಚರಂಡಿ, ರಸ್ತೆ ಹಾಗೂ ಸಿಡಿ ಕಾಮಗಾರಿಯಿಂದಾಗಿ ಇಲ್ಲಿನ ನಿವಾಸಿಗಳು ತುಂಬಾ ಸಂಕಷ್ಟವನ್ನೆದುರಿಸುತ್ತಿದ್ದಾರೆ. ಕಾಲವಿಳಂಬ ಮಾಡದೇ ಕಾಮಗಾರಿಯನ್ನು ಪೂರ್ಣಗೊಳಿಸಿ ಅನುಕೂಲ ಕಲ್ಪಿಸಬೇಕು ಹಾಗೂ ಹೊಳೆ ನೀರಿನ ಸೌಲಭ್ಯ ಒದಗಿಸಬೇಕು ಎಂದು ಬಡಾವಣೆಯ ನಿವಾಸಿಗಳು ಒತ್ತಾಯಿಸಿದರು.
ನಗರದ ನಗರಭೆ ಕಛೇರಿಯಲ್ಲಿ ಶ್ರೀಕಂಠಪ್ಪ ಬಡಾವಣೆಯ ನಿವಾಸಿಗಳು ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಸಂಘಟನೆ ವತಿಯಿಂದ ನಗರಸಭೆ ಆಯುಕ್ತರಾದ ಗಂಗಾಧರ ಬೆಲ್ಲದ ಅವರಿಗೆ ಮನವಿ ಸಲ್ಲಿಸಿದರು.
ನಗರಸಭೆಯ 31 ನೇ ವಾರ್ಡ್ ವ್ಯಾಪ್ತಿಯಲ್ಲಿರುವ ಶ್ರೀಕಂಠಪ್ಪ ಬಡಾವಣೆಯಲ್ಲಿ ಎರಡು ಕಾಲೇಜು ಹಾಸ್ಟೇಲ್ ಹಾಗೂ ಒಂದು ಶಾಲೆ ಇದೆ. ಇಲ್ಲಿ ವಾಸ ಮಾಡುತ್ತಿರುವ ನಿವಾಸಿಗಳು ಚರಂಡಿ ಹಾಗೂ ರಸ್ತೆ ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಈ ಸಮಸ್ಯೆ ಪರಿಹರಿಸುವಂತೆ ಕಳೆದ ಹತ್ತಾರು ವರ್ಷಗಳಿಂದ ಮನವಿ ಮಾಡುತ್ತಲೇ ಬಂದಿದ್ದಾರೆ. ಅದಕ್ಕಾಗಿ ಶಾಸಕರು, ನಗರಸಭೆ, ಲೋಕಾಯುಕ್ತರು, ಮಾನವ ಹಕ್ಕುಗಳ ಆಯೋಗದ ಗಮನಕ್ಕೂ ತರಲಾಗಿದೆ.
ಅಪೂರ್ಣಗೊಂಡ ಕಾಮಗಾರಿಯಿಂದುಂಟಾದ ಸಮಸ್ಯೆಯ ಕುರಿತು ಈಗಾಗಲೇ ನಗರಸಭೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಚರಂಡಿ ನೀರು ರಾಜಕಾಲುವೆಗೆ ಸೇರುವಂತಾಗಲು ರಾಜ್ಯ ಹೆದ್ದಾರಿ ಪಕ್ಕದ ದೊಡ್ಡ ಚರಂಡಿಯನ್ನು ದುರಸ್ತಿ ಮಾಡಿಸುವುದು ಹಾಗೂ ಅಪೂರ್ಣವಾಗಿರುವ ಕೆಲಸಗಳನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಅನಿವಾರ್ಯವಾಗಿ ನಿವಾಸಿಗಳು ತೀವ್ರ ತೆರನಾದ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆಂಬುದನ್ನು ಆಯುಕ್ತರ ಗಮನಕ್ಕೆ ತಂದರು.
ಮನವಿ ಭರವಸೆ: ಆಯುಕ್ತರಾದ ಗಂಗಾಧರ ಬೆಲ್ಲದ ಮನವಿ ಸ್ವೀಕರಿಸಿ ಕೂಡಲೇ ಚರಂಡಿ ನೀರು ಸರಾಗವಾಗಿ ಹರಿದುಹೋಗುವಂತೆ ಜೆಸಿಬಿಯಿಂದ ಕೆಲಸ ಮಾಡಿಸಲಾಗುವುದು ಎಂದು ಭರವಸೆ ನೀಡಿದರು. ಅಪೂರ್ಣಗೊಂಡ ಕಾಮಗಾರಿಯನ್ನು ಪೂರ್ಣಗೊಳಿಸಲು ಹಾಗೂ ಹೊಳೆ ನೀರಿನ ಸೌಲಭ್ಯವನ್ನು ಒದಗಿಸಲು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಸವರಾಜ ಪೂಜಾರ, ಶಂಕ್ರಣ್ಣ ಮಾಳಮ್ಮನವರ, ಲಕ್ಷ್ಮೀಪ್ರಭ ಎಸ್. ಹುಲ್ಲೂರು, ಅನಿತಾ ಬಿ. ಸೂರಣಗಿ, ಸುರೇಶ ದು. ವಡ್ಡರ, ವಿವೇಕ ಎಸ್ ಹುಲ್ಲೂರು ಇದ್ದರು.