ಸಿರಿಧಾನ್ಯಗಳ ಬೇಸಾಯ, ಪ್ರಾಮುಖ್ಯತೆ ಹಾಗೂ ಮಾರುಕಟ್ಟೆ ಬಗ್ಗೆ ಚರ್ಚೆ
ಹುಲಕೋಟಿ 12: 2025-26 ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಅಂಗವಾಗಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಐ.ಸಿ.ಎ.ಆರ್-ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಕರ್ನಾಟಕ ರಾಜ್ಯ ಕೃಷಿ ಇಲಾಖೆ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ದಿನಾಂಕ 29-05-2025 ರಿಂದ 12-06-2025 ರ ವರೆಗೆ ಗದಗ ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಕೃಷಿ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಕೈಗೊಂಡಿತು. 12-06-2025, ಹದಿನೈದನೇಯ ದಿನ ಹಾಗೂ ಕೊನೆಯ ದಿನವಾದ ಇಂದು ಗದಗ ತಾಲೂಕಿನ ಕಳಾಸಾಪೂರ, ಕದಡಿ, ನಾರಾಯಣಪುರ, ನರಸಾಪೂರ ಹಾಗೂ ಮುಳಗುಂದ ಗ್ರಾಮಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿತ್ತು. ಮುಳಗುಂದ ಗ್ರಾಮದಲ್ಲಿ ಆರ್.ಎನ್.ದೇಶಪಾಂಡೆ ರೈತ ಉತ್ಪಾದಕರ ಸಂಘ ಹಾಗೂ ಉನ್ನತಿ ಮಹಿಳಾ ವಿವಿಧೋದ್ದೇಶಗಳ ಸಂಘದ ಸಹಯೋಗದಲ್ಲಿ ಅಭಿಯಾನವನ್ನು ಏರಿ್ಡಸಲಾಯಿತು. ಈ ಅಭಿಯಾನ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಸಿರಿಧಾನ್ಯಗಳ ಬೇಸಾಯ, ಪ್ರಾಮುಖ್ಯತೆ ಹಾಗೂ ಮಾರುಕಟ್ಟೆ ಬಗ್ಗೆ ಸವಿಸ್ತಾರವಾಗಿ ಚರ್ಚೆ ನಡೆಯಿತು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಂದ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಯಿತು.
ಐ.ಸಿ.ಎ.ಆರ್-ರಾಷ್ಟ್ರೀಯ ಪಶು ಪೋಷಣೆ ಹಾಗೂ ಶರೀರಕ್ರಿಯಾ ವಿಜ್ಞಾನ ಸಂಸ್ಥೆ, ಬೆಂಗಳೂರು ಹಾಗೂ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ, ಬೆಂಗಳೂರಿನ ವಿಜ್ಞಾನಿಗಳು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಕೃಷಿ ಅಧಿಕಾರಿಗಳು, ಆತ್ಮ ಸಿಬ್ಬಂದಿ, ಕೃಷಿ ಸಖಿಯರು, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳು, ಪಶು ಸಖಿಯರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ರೈತ ಮುಖಂಡರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಈ ಅಭಿಯಾನದಲ್ಲಿ ವಿವಿಧ ತಂತ್ರಜ್ಞಾನಗಳಾದ ಮುಂಗಾರು ಬೆಳೆಗಳಲ್ಲಿ ಬೀಜೋಪಚಾರ, ಸುಧಾರಿತ ತಳಿಗಳು, ಸಮಗ್ರ ಪೋಷಕಾಂಶಗಳ, ಕೀಟ ಹಾಗೂ ರೋಗಗಳ ನಿರ್ವಹಣೆ, ತೋಟಗಾರಿಕೆ ಬೆಳೆಗಳು, ಸಿರಿಧಾನ್ಯ ಹಾಗೂ ಅವುಗಳ ಮಹತ್ವ, ಕೃಷಿ ಯಂತ್ರೋಪಕರಣಗಳು, ಸಮಗ್ರ ಕೃಷಿ ಪದ್ಧತಿಗಳ ತರಬೇತಿ ಹಾಗೂ ಪ್ರಾತ್ಯಕ್ಷಿಕೆ ನೀಡಲಾಯಿತು.
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಮುಂಗಾರು ಹಂಗಾಮಿನ ಅಡಿ ಅಭಿವೃದ್ಧಿ ಪಡಿಸಿದ ಮುಂಗಾರು ಬೆಳೆಗಳಾದ ಹೆಸರು, ಶೇಂಗಾ, ಸೂರ್ಯಕಾಂತಿ, ಗೋವಿನ ಜೋಳ, ಈರುಳ್ಳಿ ಬೆಳೆಗಳ ಕುರಿತ ಕೃಷಿ ಕೈಪಿಡಿಯನ್ನು ರೈತರಿಗೆ ನೀಡಲಾಯಿತು. ಜೊತೆಗೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ವಿವಿಧ ಯೋಜನೆಗಳ ಬಗ್ಗೆ ಹಸ್ತಪ್ರತಿಗಳನ್ನು ವಿತರಿಸಲಾಯಿತು. ಗದಗ ತಾಲೂಕಿನ 1310 ಜನ ರೈತ ಹಾಗೂ ರೈತ ಮಹಿಳೆಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.