ಕಂಪ್ಲಿ 28: ರೈತರು ನಾಡಿನ ಜೀವಾಳವಾಗಿದ್ದು, ಶಾಸಕ ನಾಗೇಂದ್ರಗೆ ಮರಳಿ ಸಚಿವ ಸ್ಥಾನ ಲಭಿಸಿದರೆ, ರೈತರಿಗೆ ಇನ್ನಷ್ಟು ಯೋಜನೆಗಳನ್ನು ತಲುಪಿಸಲು ಸಾಧ್ಯವಾಗುತ್ತದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿ ಬಳ್ಳಾರಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ ಬಳ್ಳಾರಿ ಅಡಿಯಲ್ಲಿ ಕೊರೆದ ಕೊಳವೆ ಬಾವಿಗಳಿಗೆ ಪಂಪ್ಸೆಟ್ ಮತ್ತು ಪೂರಕ ಸಾಮಾಗ್ರಿಗಳನ್ನು ರೈತರಿಗೆ ವಿತರಿಸಿ ಮಾತನಾಡಿ, ರೈತರು ದೇಶದ ಬೆನ್ನೆಲುಬಾಗಿದ್ದು, ಅವರ ಶ್ರಮದಿಂದಾಗಿ ಜನರು ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ.
ಸರ್ಕಾರ ರೈತರಿಗೆ ಸಾಕಷ್ಟು ಯೋಜನೆಗಳನ್ನು ನೀಡುತ್ತಿದ್ದು, ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ತಾಲೂಕು ಅಭಿವೃದ್ಧಿ ಅಧಿಕಾರಿ ಬಿ.ಎನ್.ರೇವಣಸಿದ್ದಪ್ಪ ಮಾತನಾಡಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2021-22 ಹಾಗೂ 22-23ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಸ್ಥಳೀಯ ಶಾಸಕರ ಮತ್ತು ಸಾಂಸ್ಥಿಕ ಕೋಟಾದಡಿಯಲ್ಲಿ ಆಯ್ಕೆಯಾದ 95 ಜನ ಅರ್ಹ ಫಲಾನುಭವಿಗಳಿಗೆ ಕೊಳವೆಬಾಯಿಗೆ ಸಂಬಂಧಿಸಿದ ಸಾಮಾಗ್ರಿಗಳನ್ನು ವಿತರಿಸಲಾಯಿತು. ಉಳಿದ 27 ಫಲಾನುಭವಿಗಳ ಜಮೀನಿನಲ್ಲಿ ಕೊಳವೆಬಾಯಿ ಕೊರೆಯುವ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ ದಿನದಲ್ಲಿ ವಿತರಿಸಲಾಗುತ್ತದೆ. ಸರ್ಕಾರದ ಪ್ರತಿಯೊಂದು ಯೋಜನೆಗಳ ಸದುಪಯೋಗ ದೊಂದಿಗೆ ರೈತರು ನೆಮ್ಮದಿಯ ಬದುಕು ಕಟ್ಟಿಕೊಳ್ಳುವ ಜತೆಗೆ ಆರ್ಥಿಕವಾಗಿ ಅಭಿವೃದ್ಧಿಯಾಗಬೇಕು.
ಬೆಂಗಳೂರು ಅರಿಹಂತ್ ಸಬ್ ಮರ್ಸಿಬಲ್ ಪಂಪ್ಸ್ ಕಡೆಯಿಂದ ಪಂಪ್ ಸೆಟ್ ಸಾಮಾಗ್ರಿಗಳನ್ನು ಸರಬರಾಜು ಮಾಡಲಾಯಿತು ಎಂದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಮಂಜುನಾಥ ನಾಯಕ, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಉಪಾಧ್ಯಕ್ಷ ಇಟಗಿ ಶರಣಗೌಡ, ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಜಿಲ್ಲಾ ವ್ಯವಸ್ಥಾಪಕ ಹೆಚ್.ಮಲ್ಲಿಕಾರ್ಜುನ ಸೇರಿದಂತೆ ರೈತರು ಪಾಲ್ಗೊಂಡಿದ್ದರು.