ಕಾರವಾರ, ಮೇ.24: ಜಿಲ್ಲಾ ಪಂಚಾಯತ ಮುಖ್ಯ ನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ ಹಳಿಯಾಳ ತಾಲೂಕಿನ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರೀಶೀಲಿಸಿದರು.
ತಾಲೂಕಿನ ತೇರಗಾಂವ್, ಕಾವಲವಾಡ ಮತ್ತು 111 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ ನಿರ್ಮಾಣವಾಗುತ್ತಿರುವ ಜಲ ಶುದ್ಧಿಕರಣ ಘಟಕಕ್ಕೆ ಭೇಟಿ ನೀಡಿ, ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ, ಘಟಕಕ್ಕೆ ರಸ್ತೆ ನಿರ್ಮಾಣ ಮಾಡಲು ತಿಳಿಸಿದರು.
ತೇರಗಾಂವ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ಅವರು ಅಲ್ಲಿರುವ ಸಿಬ್ಬಂದಿ ಕೊರತೆಯನ್ನು ಗಮನಿಸಿ, ಕಸ ವಿಂಗಡಣೆ ಕೆಲಸಕ್ಕೆ ಸ್ವಸಹಾಯ ಸಂಘದ ಮಹಿಳೆಯರನ್ನು ನೇಮಕ ಮಾಡಲು ಸೂಚಿಸಿದ ಅವರು, ಮಲತ್ಯಾಜ್ಯ ನಿರ್ವಹಣಾ ಘಟಕದ ಕಾಮಗಾರಿ ಪೂರ್ಣಗೊಂಡಿದ್ದು ಅದನ್ನು ಕೂಡಲೇ ಪ್ರಾರಂಭಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತನ ಆಡಳಿತ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಕಾರ್ಯ ನಿರ್ವಾಹಕ ಅಧಿಕಾರಿ ವಿಲಾಸರಾಜ್, ಪಂಚಾಯತ ರಾಜ್ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಸತೀಶ್ ಆರ್, ನರೇಗಾ ಸಹಾಯಕ ನಿರ್ದೇಶಕಿ ಅನುಪಮಾ ಬೆನ್ನೂರ್, ಯಡೋಗ ಹಾಗೂ ತೇರಗಾಂವ್ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ಸಿಬ್ಬಂದಿಗಳು, ಹಾಗೂ ಗ್ರಾಮ ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.