ಕೊಪ್ಪಳ: ನಿವೇದಿತಾ ಪ್ರೌಢಶಾಲೆಯಲ್ಲಿ ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮ

Koppal: Diarrhea control program at Nivedita High School

ಕೊಪ್ಪಳ  18:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 17 ರಂದು ಕೊಪ್ಪಳ ನಗರ ಪ್ರದೇಶದ ಹಮಾಲರ ಕಾಲೋನಿಯಲ್ಲಿರುವ ನಿವೇದಿತಾ ಪ್ರೌಢಶಾಲೆಯಲ್ಲಿ ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಕಾಂತ ಹೆಚ್‌.ಹೆಚ್‌. ಅವರು ಮಾತನಾಡಿ, ಜೂನ್ 16 ರಿಂದ 31 ರವರೆಗೆ ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಲುಷಿತ ನೀರು/ಆಹಾರ ಸೇವನೆಯಿಂದ, ಕೈತೊಳೆಯದೇ ಊಟ ಮಾಡುವುದರಿಂದ ಅತಿಸಾರ ಭೇದಿ ಉಂಟಾಗುತ್ತದೆ. ಅತಿಸಾರ ಭೇದಿಯಿಂದ ನಿಮ್ಮ ಮಕ್ಕಳನ್ನು ರಕ್ಷಿಸಲು ಸಾಬೂನು ಮತ್ತು ನೀರಿನಿಂದ ಕೈಗಳನ್ನು ಚೆನ್ನಾಗಿ ತೊಳೆಯಬೇಕು. ಕುಡಿಯಲು ಶುದ್ಧವಾದ ಮತ್ತು ಸುರಕ್ಷಿತ ನೀರನ್ನೇ ಬಳಸಬೇಕು. ನಿಮ್ಮ ಮನೆಯ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು, ಕಡ್ಡಾಯವಾಗಿ ಎಲ್ಲರೂ ಶೌಚಾಲಯ ಬಳಸಬೇಕು. ಮಕ್ಕಳಿಗೂ ಸಹ ಶೌಚಾಲಯ ಬಳಸುವ ರೂಢಿ ಮಾಡಬೇಕು. ನವಜಾತ ಶಿಶುಗಳಿಗೆ 06 ತಿಂಗಳವರೆಗೆ ಕೇವಲ ತಾಯಿಯ ಎದೆ ಹಾಲು ನೀಡಬೇಕು. 06 ತಿಂಗಳ ನಂತರ ಪೂರಕ ಪೌಷ್ಠಿಕ ಆಹಾರ ನೀಡಬೇಕು. ಮಕ್ಕಳಿಗೆ ಪೋಷಕಾಂಶಗಳನ್ನು ಒಳಗೊಂಡ ಪೂರಕ ಆಹಾರ ನೀಡಬೇಕೆಂದು ತಿಳಿಸಿದರು. ವಿದ್ಯಾರ್ಥಿಗಳು ಈ ವಿಷಯದ ಕುರಿತು ತಮ್ಮ ಮನೆಯಲ್ಲಿ ತಿಳಿಸಿ, ಅತಿಸಾರಭೇದಿ ನಿಯಂತ್ರಣ ಮಾಡುವಲ್ಲಿ ತಮ್ಮ ಸಹಕಾರ ನೀಡಿ ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು. 

ಶಾಲಾ ಮುಖ್ಯೋಪಾಧ್ಯಾಯರಾದ ನೀತೀಶ್ ಅವರು ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಹಮ್ಮಿಕೊಳ್ಳುವ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಗಿವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ತಮ್ಮ ತಮ್ಮ ಗ್ರಾಮಗಳಲ್ಲಿ ಹಾಗೂ ಸುತ್ತ್ತ ಮುತ್ತ್ತಲಿನ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ತಿಳಿಸಿದರು. 

ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನೀರೀಕ್ಷಣಾಧಿಕಾರಿಗಳಾದ ಶ್ರೀನಿವಾಸ ಸ್ವಾಗತಿಸಿದರು. ನಮ್ಮ ಕ್ಲಿನಿಕ್‌ನ ವಿಜಯ ಇವರು ವಂದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ, ಯಶಸ್ವಿಗೊಳಿಸಿದರು.