ಹೊಸ ವರ್ಷದಲ್ಲಾದರೂ ಅರ್ಹರಿಗೆ ಸ್ಥಾನ ಸಿಗಲಿ- ಡಾ.ಸಿದ್ರಾಮ ವಾಘಮಾರೆ
ಬಳ್ಳಾರಿ 31: ನೂತನ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಅವಕಾಶ ವಂಚಿತ ಸಮಾಜ ಸೇವಕರು ಮತ್ತು ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದವರಿಗೆ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಅಧ್ಯಕ್ಷ ಸ್ಥಾನ, ನಿರ್ದೇಶಕರ ಹಾಗೂ ಸದಸ್ಯರ ಸ್ಥಾನವನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಭರ್ತಿ ಮಾಡಲಿ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಡಾ.ಸಿದ್ರಾಮ ವಾಘಮಾರೆ ಅವರು ಅಹಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದವರು ಅನೇಕರಿದ್ದಾರೆ. ಅದರಲ್ಲಿ ನಾನೂ ಒಬ್ಬನಾಗಿದ್ದೇನೆ. ದೇವರಾಜ್ ಅರಸು ಬಳಿಕ ಸಾಮಾಜಿಕ ನ್ಯಾಯದ ಹರಿಕಾರರೆನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದಾರೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಉತ್ತಮ ಆಡಳಿತ ನಡೆಸುತ್ತಿದ್ದಾರೆ.
ಅಹಿಂದ ಮುಖ್ಯಮಂತ್ರಿಯಾಗಿ ತಮ್ಮ ಈ ಅಧಿಕಾರಾವಧಿಯಲ್ಲಿ ಹಿಂದುಳಿದ, ಶೋಷಿತ ಸಮುದಾಯಗಳ ಸಮಾಜ ಸೇಕವರು, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಖಾಲಿ ಇರುವ ನಿಗಮ, ಮಂಡಳಿಗಳಿಗಳ ಪದಾಧಿಕಾರಿಗಳ ಸ್ಥಾನವನ್ನು ಭರ್ತಿ ಮಾಡಬೇಕು. ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಆ ಮೂಲಕ ಸಾಮಾಜಿಕ ನ್ಯಾಯ ನೀಡುತ್ತಾರೆಂಬ ನೀರೀಕ್ಷೆಯಲ್ಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಹೊಸ ವರ್ಷದ ಈ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ ಅವರು ದೈವೀ ಅನುಗ್ರಹದಿಂದ ಎಲ್ಲ ಸಮುದಾಯದ ಜನರಲ್ಲಿ ಸುಖ, ಶಾಂತಿ, ನೆಮ್ಮದಿಗಳು ಲಭಿಸಲಿ. ವಿಶೇಷವಾಗಿ ಬೀದರ್ ಜಿಲ್ಲೆಯ ಉಸ್ತುವಾರಿ ಮಂತ್ರಿಗಳು, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ಪೌರಾಡಳಿತ ಸಚಿವರಾದ ರೆಹಮಾನ್ ಖಾನ್, ಮಾಜಿ ಸಚಿವರಾದ ರಾಜಶೇಖರ್ ಪಾಟೀಲ್ ಮತ್ತು ಸಚಿವ ಸಂಪುಟದ ಎಲ್ಲ ಮಾನ್ಯರು ತಮ್ಮ ಬೇಡಿಕೆ ಈಡೇರಿಸುತ್ತಾರೆಂಬ ನಂಬಿಕೆ ಇದೆ ಎಂದು ಅವರು ತಿಳಿಸಿದ್ದಾರೆ.