ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆ: ತಾಲೂಕಾ ಮಟ್ಟದ ಮಾಸ್ಟರ್ ಟ್ರೈನರ್ಗಳಿಗೆ ತರಬೇತಿ
ಪರಿಶಿಷ್ಟ ಜಾತಿ ಮಿಸಲಾತಿ ವರ್ಗೀಕರಣ ಸಮೀಕ್ಷೆಯಿಂದ ಯಾವುದೇ ಕುಟುಂಬ ಹೊರಗುಳಿಯದಿರಲಿ -ಜಿಲ್ಲಾಧಿಕಾರಿ ನಲಿನ ಅತುಲ್
ಕೊಪ್ಪಳ 28: ಪರಿಶಿಷ್ಟ ಜಾತಿ ಮಿಸಲಾತಿ ವರ್ಗೀಕರಣ ಸಮೀಕ್ಷೆಯಿಂದ ಯಾವುದೇ ಒಂದೇ ಒಂದು ಕುಟುಂಬವು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಲಿನ ಅತುಲ್ ಹೇಳಿದರು.
ಅವರು ಸೋಮವಾರ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳಮೀಸಲಾತಿ ಕುರಿತು ಕ್ರಮವಹಿಸಲು ಸರ್ಕಾರದಿಂದ ನಡೆಸಲಾಗುತ್ತಿರುವ ಸಮೀಕ್ಷೆ ಕುರಿತು ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರಗಳಿಂದ ತಾಲೂಕಾ ಮಟ್ಟದ ಮಾಸ್ಟರ್ ಟ್ರೈನರ್ರವರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಓದ್ಯೋಗಿಕ ಪ್ರಾತಿನಿಧ್ಯತೆ ಇತ್ಯಾದಿ ಸ್ಥಿತಿಗತಿಗಳಿಗಾಗಿ ಪರಿಶಿಷ್ಟ ಜಾತಿ ಮಿಸಲಾತಿ ವರ್ಗೀಕರಣ ಸಮೀಕ್ಷೆಯು ಅತ್ಯವಶ್ಯಕವಾಗಿದ್ದು, ಈ ಸಮೀಕ್ಷೆಯು ಒಟ್ಟು ಮೂರು ಹಂತದಲ್ಲಿ ನೆಡೆಯಲ್ಲಿದೆ. ತಾಲ್ಲೂಕು ಮಟ್ಟದ ಮಾಸ್ಟರ್ ತರಬೇತುದಾರರು ತಮ್ಮ ತಾಲ್ಲೂಕಿನ ವ್ಯಾಪ್ತಿಯ ಮತಗಟ್ಟೆವಾರು ಪ್ರತಿಯೊಂದು ಮನೆಗೆ ತೆರಳಿ, ಜಾಗರೂಕತೆಯಿಂದ ಸಮೀಕ್ಷೆ ನೆಡಸಬೇಕು ಎಂದರು.
ಸಮೀಕ್ಷೆಯಲ್ಲಿ ಯಾವುದೇ ರೀತಿಯ ತಪ್ಪು ಮಾಹಿತಿಯನ್ನು ಭರ್ತಿ ಮಾಡಬಾರದು. ಮನೆ ಮನೆಗೆ ಭೇಟಿ ನೀಡಿದಾಗ ಅಲ್ಲಿನ ಕುಟುಂಬ ಸದಸ್ಯರೊಂದಿಗೆ ಸೌಜನ್ಯವಾದ ವರ್ತನೆಯಿಂದ ನಡೆದುಕೊಳ್ಳಬೇಕು. ಮಾಹಿತಿಯನ್ನು ಮನೆಯ ಮುಖ್ಯಸ್ಥರಿಂದ ಪಡೆದುಕೊಳ್ಳಬೇಕು. ಸಮೀಕ್ಷೆಯ ಪ್ರಶ್ನೆಗಳಿಗೆ ಕುಟುಂಬದ ಸದಸ್ಯರು ನೀಡಿದಂತಹ ಮಾಹಿತಿಯನ್ನು ಮಾತ್ರ ಭರ್ತಿ ಮಾಡಬೇಕು. ಈ ಸಮೀಕ್ಷೆಯಲ್ಲಿ ಯಾವುದೇ ಮಧ್ಯವರ್ತಿಗಳು, ಸಂಘ, ಸಂಸ್ಥೆಗಳು ಮತ್ತು ಮಕ್ಕಳಯಿಂದ ಯಾವುದೇ ಮಾಹಿತಿಯನ್ನು ಭರ್ತಿ ಮಾಡುವಂತಿಲ್ಲ. ಸಮೀಕ್ಷೆಯಲ್ಲಿನ ಎಲ್ಲಾ ಪ್ರಶ್ನೆಗಳನ್ನು ಅರ್ಥೈಸಿಕೊಂಡು ಸರಿಯಾದ ಮಾಹಿತಿಯನ್ನು ಸಂಗ್ರಹಿಸಿ ಮೊಬೈಲ್ ಆ್ಯಪ್ ಮೂಲಕವೇ ಸಮೀಕ್ಷೆ ಕೈಗೊಳ್ಳಬೇಕು. ಸಮೀಕ್ಷೆಯ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಆಧಾರ್ ಮತ್ತು ರೇಷನ್ ಕಾರ್ಡನ್ನು ಸಮೀಕ್ಷೆಗಾರರ ಮುಂದೆ ಹಾಜರುಪಡಿಸಬೇಕು ಎಂದು ಹೇಳಿದರು.
ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರು ಮಾತನಾಡಿ, ಕರ್ನಾಟಕ ಸರಕಾರವು ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಜಾರಿ ಮಾಡಲು ಗೌರವಾನ್ವಿತ ಡಾ. ಹೆಚ್.ಎನ್ ನಾಗಮೋಹನದಾಸ ಅವರ ಅಧ್ಯಕ್ಷತೆಯಲ್ಲಿ ಏಕ ವ್ಯಕ್ತಿ ವಿಚಾರಣಾ ಆಯೋಗವನ್ನು ನೇಮಿಸಿ ಒಳ ಮೀಸಲಾತಿಯನ್ನು ವರ್ಗಿಕರಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಉಪವರ್ಗೀಕರಣ ಕೈಗೊಳ್ಳಲು ಅವಶ್ಯಕವಿರುವ ದತ್ತಾಂಶಗಳನ್ನು ಸಂಗ್ರಹಿಸಲು ಸಮೀಕ್ಷೆಯನ್ನು ಕೈಗೊಳ್ಳಲು ಉದೇಶಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆಯು 3 ಹಂತಗಳಲ್ಲಿ ಕೈಗೊಳ್ಳಲಾಗುತ್ತಿದೆ. ಸಮೀಕ್ಷೆದಾರರು ಮನೆ ಮನೆ ಬೇಟಿ ನೀಡಿ ಸಮೀಕ್ಷೆಯನ್ನು ಮೇ 5 ರಿಂದ ಮೇ 17ರ ವರೆಗೆ ಬೆಳಗ್ಗೆ 8 ರಿಂದ ಸಾಯಂಕಾಲ 6.30 ರವರೆಗೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆಯನ್ನು ಕೈಗೊಳ್ಳಬೇಕು. ಸಮೀಕ್ಷೆ ಬ್ಲಾಕಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು, ಮನೆ ಮನೆ ಭೇಟಿ ಅವಧಿಯಲ್ಲಿ ಬಿಟ್ಟು ಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಮೇ 19 ರಿಂದ ಮೇ 21ರ ವರೆಗೆ ಸಂಗ್ರಹಿಸಬೇಕು. ಮೇ 19 ರಿಂದ ಮೇ 23ರ ವರೆಗೆ ಕಡ್ಡಾಯವಾಗಿ ಆಧಾರ್ ನಂಬರ್ ಹಾಗೂ ರೇಷನ ಕಾರ್ಡ್ ನಂಬರನೊಂದಿಗೆ ಸ್ವಯಂ ಘೋಷಣೆ (ಆನ್ಲೈನ)ಯನ್ನು ಸಲ್ಲಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ತರಬೇತಿ ಕಾರ್ಯಾಗಾರ: ಈ ತರಬೇತಿ ಕಾರ್ಯಾಗಾರದಲ್ಲಿ ಯಲಬುರ್ಗಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಶಿಧರ ಸಕ್ರಿ, ಎಡಿಸಿಎಸ್ ಕೊಪ್ಪಳದ ಡಿಪಿಎಂ ಮಲ್ಲಿಕಾರ್ಜುನ ಪಲ್ಲೇದ್ ಹಾಗೂ ಜಿಲ್ಲಾ ಪಂಚಾಯತ ಪಿಎಂಆರ್ ರಾಜೇಶ ಡಿ. ಅವರು ತರಬೇತಿ ನೀಡಿದರು. ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಮಾಸ್ಟರ್ ಟ್ರೈನರ್ಗಳು ಪಾಲ್ಗೊಂಡಿದ್ದರು.