ಬೆಂಗಳೂರು, ಏ.22, ಬೆಂಗಳೂರಿನ ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಐವತ್ತನಾಲ್ಕು ಮಂದಿ ಪುಂಡರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ಕ್ವಾರಂಟೈನ್ ಗೆ ಒಳಗಾಗಬೇಕಿದ್ದ ಗಲಭೆಕೋರರನ್ನು ಕೊರೋನ ಸೋಂಕಿನ ವಿಷಯದಲ್ಲಿ ಹಸಿರು ವಲಯವಾಗಿರುವ ರಾಮನಗರದ ಜೈಲಿನಲ್ಲಿರಿಸುವುದು ವಿವೇಕಯುತ ನಿರ್ಧಾರವಲ್ಲ ಎಂದು ಟೀಕಿಸಿದ್ದಾರೆ. ಚೋದ್ಯವೆಂದರೆ ರಾಮನಗರ ಜೈಲಿನ ಖೈದಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಿ, ಪಾದರಾಯನಪುರದ ಪುಂಡರನ್ನು ರಾಮನಗರದ ಕಾರಗೃಹದಲ್ಲಿ ಹದಿನೈದಕ್ಕೂ ಹೆಚ್ಚು ಮಂದಿಯನ್ನು ಒಂದೇ ಕೊಠಡಿಯಲ್ಲಿರಿಸುವ ಮೂಲಕ ಕೊರೋನ ಭೀತಿ ಎದುರಾಗಿದೆ. ಜಿಲ್ಲೆಯ ಜನತೆ ಭಯಗೊಂಡಿದ್ದಾರೆ. ಸರಕಾರ ತಕ್ಷಣವೇ ತನ್ನ ನಿರ್ಧಾರವನ್ನು ಬದಲಿಸಬೇಕು ಎಂದು ಒತ್ತಾಯಿಸಿದ್ದಾರೆ.ಸೋಮವಾರ ಸೆರೆಸಿಕ್ಕ 54 ಮಂದಿ ನ್ಯಾಯಾಂಗ ಬಂಧನಕ್ಕೆ ಒಳಗಾದವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಇರಿಸುವುದನ್ನು ಬಿಟ್ಟು ರಾಮನಗರ ಜಿಲ್ಲಾ ಕಾರಾಗೃಹದಲ್ಲಿರಿಸುವ ನಿರ್ಧಾರ ತಗೆದುಕೊಂಡವರು ಯಾರು? ನನಗಿರುವ ಮಾಹಿತಿ ಪ್ರಕಾರ ಹೆಚ್ಚುವರಿ ಪೋಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಇಂತಹದ್ದೊಂದು ದುಡುಕು ನಿರ್ಧಾರಕ್ಕೆ ಕಾರಣರಾಗಿದ್ದಾರೆ. ಈ ಬಗ್ಗೆ ಮುಖ್ಯ ಮಂತ್ರಿ, ಗೃಹ ಸಚಿವರು ಹಾಗೂ ಗೃಹ ಕಾರ್ಯದರ್ಶಿ ಅವರೊಂದಿಗೆ ಎರೆಡೆರಡು ಬಾರಿ ದೂರವಾಣಿಯಲ್ಲಿ ಚರ್ಚಿಸಿದ್ದೇನೆ. ರಾಮನಗರ ಜಿಲ್ಲೆಯ ಜನರು ಮತ್ತು ಜನ ಪ್ರತಿನಿಧಿಗಳು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಯಾವುದೇ ಪ್ರತಿಭಟನೆಗೆ ಇಳಿಯದಂತೆ ಅವರ ಮನವೊಲಿಸಿದ್ದೇನೆ. ಇದನ್ನು ಸರಕಾರದ ಗಮನಕ್ಕೂ ತರಲಾಗಿದೆ. ಸರಕಾರ ಇಂತಹ ಸೂಕ್ಷ ವಿಚಾರದಲ್ಲಿ ಜನತೆಯೊಂದಿಗೆ ಚೆಲ್ಲಾಟವಾಡದೇ ತಕ್ಷಣವೇ ತುರ್ತು ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಪಾದರಾಯನಪುರ ಗಲಭೆ ಸಂಬಂಧ ಒಟ್ಟು ಈವರೆಗೆ ನೂರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಈ ಎಲ್ಲರನ್ನೂ ಬೆಂಗಳೂರಿನ ಯಾವುದಾದರೂ ಸರಕಾರೀ ಆಸ್ಪತ್ರೆ, ಹಾಸ್ಟೆಲ್ ಅಥವಾ ಯಾವುದಾದರೂ ಕಟ್ಟಡದಲ್ಲಿ ಬಂದೊಬಸ್ತ್ನೊಂದಿಗೆ ಇಡುವುದು ಸೂಕ್ತ ಎಂದು ಅವರು ಸಲಹೆ ನೀಡಿದ್ದಾರೆ.