ಬೆಂಗಳೂರು, ಮೇ 20, ಕೊರೋನಾ ಸೋಂಕು ಇದ್ದ ಕಳ್ಳನೊಬ್ಬನನ್ನು ಬಂಧಿಸಿರುವ ಇನ್ಸ್ ಪೆಕ್ಟರ್ ಸೇರಿ ಠಾಣೆಯ 15 ಮಂದಿ ಪೊಲೀಸರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ.ಕಬ್ಬಿಣ ಕಳವು ಮಾಡಿ ಸಿಕ್ಕಿ ಬಿದ್ದ ಕಳ್ಳನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದರು. ಆರೋಪಿಯು ಪಾದರಾಯನಪುರದ ವನಾಗಿದ್ದು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಕಾರ್ಯ ನಿರ್ವಹಿಸಿದ ಹೆಬ್ಬಗೋಡಿ ಠಾಣೆಯ ಇನ್ಸ್ ಪೆಕ್ಟರ್ ಸೇರಿ 15 ಪೊಲೀಸರನ್ನು ಕ್ವಾರಂಟೈನ್ ಮಾಡಿ ನಿಗಾ ವಹಿಸಲಾಗಿದೆ.ಆರೋಪಿಗೆ ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಯು ಮೇ 17ರಂದು ಕಬ್ಬಿಣ ಕಳ್ಳತನ ಮಾಡುವಾಗ ಸಿಕ್ಕಿ ಬಿದ್ದ ಆತನನ್ನು ಹಿಡಿದು ಸ್ಥಳೀಯರು ಥಳಿಸಿ ಪೊಲೀಸರಿಗೆ ಒಪ್ಪಿಸಿದರು.
ಬಳಿಕ ಹೆಬ್ಬಗೋಡಿ ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಕಳ್ಳನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು.ನಂತರ ವಶಕ್ಕೆ ಪಡೆದು ವಿಚಾರಣೆ ಬಳಿಕ ಆತ ಪಾದರಾಯನಪುರದ ನಿವಾಸಿ ಎನ್ನುವುದು ತಿಳಿಯುತ್ತಿದ್ದಂತೆ ಜೈಲಿಗಟ್ಟುವ ಮುನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.ಪರೀಕ್ಷೆ ವರದಿಯಲ್ಲಿ ಅತನಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದರಿಂದ ಆರೋಗ್ಯಾಧಿಕಾರಿಗಳು ಹೆಬ್ಬಗೋಡಿ ಠಾಣೆಯ 15 ಪೊಲೀಸರನ್ನು ಕ್ವಾರಂಟೈನ್ನಲ್ಲಿ ಇರಿಸಿದ್ದಾರೆ. ಜೊತೆಗೆ ಠಾಣೆಯಲ್ಲಿ ಸ್ಯಾನಿಟೈಜರ್ ಸಿಂಪಡಿಸಲಾಗುತ್ತಿದೆ. ಇತ್ತ ಆತನನ್ನು ಥಳಿಸಿದ ಜನರನ್ನು ಕೂಡ ಗುರುತಿಸಿ ಕ್ವಾರಂಟೈನ್ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಿಗೂ ಕಳ್ಳನಿಂದ ಆತಂಕ ಶುರುವಾಗಿದೆ.