ನೆನೆಗುದಿಗೆ ಬಿದ್ದಿರುವ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಆದ್ಯತೆ : ರಮೇಶ್ ಜಾರಕಿಹೊಳಿ

ಬೆಂಗಳೂರು, ಮೇ 20,ಬಹುದಿನಗಳಿಂದ ಪೂರ್ಣಗೊಳ್ಳದೇ ನೆನೆಗುದಿಗೆ ಬಿದ್ದಿರುವ ಭದ್ರಾ ಮೇಲ್ದಂಡೆ ಯೋಜನೆಯ ಉಳಿದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರ ಜಲಾಶಯದಿಂದ ನೀರು ಎತ್ತುವ ಭದ್ರಾ ಮೇಲ್ದಂಡೆ ಯೋಜನೆಯ ಏತ ನೀರಾವರಿ ಕಾಮಗಾರಿಗಳು ಪೂರ್ಣಗೊಂಡಿದ್ದು, ಕಳೆದ ವರ್ಷದ ಮಳೆಗಾಲದಲ್ಲಿ ಪ್ರಾಯೋಗಿಕವಾಗಿ ನೀರನ್ನು ಪಂಪ್ ಮಾಡಿ ಒಟ್ಟು ೩.೩೩ ಟಿಎಂಸಿ ನೀರನ್ನು ಚಿತ್ರದುರ್ಗದ ವಾಣಿವಿಲಾಸ ಸಾಗರ ಜಲಾಶಯಕ್ಕೆ ಪೂರೈಸಲಾಗಿದೆ. ಈ ವರ್ಷ ಮಳೆಯಿಂದ ೭.೨೪ ಟಿಎಂಸಿ ನೀರಿನ ಒಳ ಹರಿವಿದ್ದು, ಒಟ್ಟಾರೆಯಾಗಿ ೧೦.೫೭ ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಾಗಲಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಯಡಿ ತರೀಕೆರೆ ಏತ ನೀರಾವರಿ ಕಾಮಗಾರಿಯನ್ನೂ ಪೂರ್ಣಗೊಳಿಸಿ, ಆ ತಾಲೂಕಿನ ೭೯ ಕೆರೆಗಳಿಗೆ ನೀರು ಪೂರೈಸಲು ಮತ್ತು ೫೦ ಸಾವಿರ ಎಕರೆಯಷ್ಟು ಭೂ ಪ್ರದೇಶಗಳಿಗೆ ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸಚಿವ ರಮೇಶ್ ಜಾರಕಿ ಹೊಳಿ ತಿಳಿಸಿದರು.ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗ ಶಾಖಾ ಕಾಲುವೆಯ ೬೦ ಕಿಲೋಮೀಟರ್ ಕಾಮಗಾರಿ ಪೂರ್ಣಗೊಳಿಸಲಾಗಿದ್ದು ಜಿಲ್ಲೆಯ ವಿವಿಧ ತಾಲೂಕುಗಳ ಅಚ್ಚುಕಟ್ಟು ಪ್ರದೇಶದ ೪೮ ಕೆರೆಗಳಿಗೆ ನೀರು ಪೂರೈಸಲು ಕ್ರಮಕೈಗೊಳ್ಳಲಾಗಿದೆ. ಈ ಯೋಜನೆಯಿಂದ ಬಯಲು ಸೀಮೆ ಪ್ರದೇಶಕ್ಕೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುತ್ತಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.