ಶಿರಸಿ 766 ಹೆದ್ದಾರಿ ರಸ್ತೆ ಶೀಘ್ರ ಪೂರ್ಣಗೊಳಿಸಿ: ಸುಷ್ಮಾ ಗೋಡಬೋಲೆ

Sirsi 766 highway road should be completed soon: Sushma Godabole

ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಮಾನ್ಸೂನ್ ಕಾಳಜಿ 

ಕಾರವಾರ 29  : ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766 ಕಾಮಗಾರಿಯನ್ನು ಶೀಘ್ರದಲ್ಲಿ ಸಂಪೂರ್ಣ ಮುಕ್ತಾಯಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಸೂಚನೆ ನೀಡಿದರು.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶಿರಸಿ-ಕುಮಟಾ ಹೆದ್ದಾರಿ ಕಾಮಗಾರಿಯ ಮುಕ್ತಾಯಕ್ಕೆ ಜಿಲ್ಲಾಡಳಿತದ ಮೂಲಕ ಸಾಕಷ್ಟು ಕಾಲಾವಕಾಶ ನೀಡಿದ್ದರೂ ಸಹ ಗುತ್ತಿಗೆದಾರರು ಇದುವರೆಗೂ ಕಾಮಗಾರಿ ಮುಕ್ತಾಯಗೊಳಿಸದ ಕುರಿತು ತೀವ್ರ ಅಸಮಧಾನ ವ್ಯಕ್ತಪಡಿಸಿದ ಉಸ್ತುವಾರಿ ಕಾರ್ಯದರ್ಶಿಗಳು, ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳ್ಳುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಕ ಹೆಚ್ಚುವರಿಯಾಗಿ ಯಂತ್ರೋಪಕರಣಗಳು ಸೇರಿದಂತೆ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡುವುದರ ಮೂಲಕ ಈ ಕಾಮಗಾರಿಯು ಆದಷ್ಟು ಶೀಘ್ರದಲ್ಲಿ ಮುಕ್ತಾಯಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.ಪ್ರಸ್ತುತ ಮಳೆಯ ಕಾರಣದಿಂದ ಬೆಣ್ಣೆಹೊಳೆ ಸೇತುವೆ ಬಳಿ ನಿರ್ಮಿಸಿದ ತಾತ್ಕಾಲಿಕ ರಸ್ತೆ ಕೊಚ್ಚಿ ಹೋಗಿದ್ದು, ಶಾಲೆಗಳು ಆರಂಭವಾಗುವ ಕಾರಣ ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರಿಗೆ ಸಂಚಾರಕ್ಕೆ ಅನುಕೂಲವಾಗುವಂತೆ 2 ದಿನದಲ್ಲಿ ಈ ರಸ್ತೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮರು ನಿರ್ಮಾಣ ಮಾಡುವಂತೆ ಸೂಚನೆ ನೀಡಿದರು. ಜಿಲ್ಲೆಯ ಹೆದ್ದಾರಿಗಳಲ್ಲಿ ನಿಗಧಿಗಿಂತ ಅಧಿಕ ಭಾರದ ಸರಕುಗಳನ್ನು ಹೊಂದಿರುವ ವಾಹನಗಳ ಸಂಚಾರ ದಿಂದ ಸೇತುವೆಗಳಿಗೆ ಹಾನಿಯಾಗುವ ಸಾಧ್ಯತೆಯಿದ್ದು, ಇದನ್ನು ನಿಯಂತ್ರಿಸಲು ಜಿಲ್ಲೆಯ ಗಡಿ ಭಾಗದಲ್ಲಿಯೇ ಇಂತಹ ಅಧಿಕ ಭಾರದ ವಾಹನಗಳನ್ನು ಪ್ರತಿ ದಿನ ಪರೀಶೀಲಸಿ ಅವುಗಳನ್ನು ಗಡಿಭಾಗದಲ್ಲಿಯೇ ತಡೆಹಿಡಿದು ದೂರು ದಾಖಲಿಸುವಂತೆ ಮತ್ತು ಈ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಪ್ರತೀ ವಾರ ವರದಿ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನೀಡುವ ಪರಿಹಾರ ಕ್ರಮಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸುವಂತೆ ಮತ್ತು ರಾಷ್ಟ್ರೀಯ ಹೆದ್ದಾರಿಯ ಸೂಕ್ತ ಸ್ಥಳದಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡುವಂತೆ ಸೂಚಿಸಿದರು.ಮನ್ಸೂನ್ ಕಾಳಜಿ : ಜಿಲ್ಲೆಯಲ್ಲಿ ಮಾನ್ಸೂನ್ ಎದುರಿಸುವ ಕುರಿತಂತೆ ಈಗಾಗಲೇ ಮಾಡಿಕೊಂಡಿರುವ ಸಿದ್ದತೆಗಳನ್ನು ಪರೀಶೀಲಿಸಿದ ಅವರು ಮಳೆಯಿಂದ ಹಾನಿಯಾದ ಪ್ರಕರಣಗಳಲ್ಲಿ ಕೂಡಲೇ ಪರಿಹಾರ ವಿತರಿಸುವಂತೆ ಮತ್ತು ತುರ್ತು ಸಂದರ್ಭದಲ್ಲಿ ಸಾರ್ವಜನಿಕರ ಸ್ಥಳಾಂತರಕ್ಕೆ ಕಾಳಜಿ ಕೇಂದ್ರಗಳಲ್ಲಿ ಸಿದ್ದವಾಗಿಟ್ಟುಕೊಂಡು ಅಲ್ಲಿ ಎಲ್ಲಾ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿದರು.ಶಾಲಾ ಕಟ್ಟಡ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲೆಯಲ್ಲಿನ ಎಲ್ಲಾ ಶಾಲೆಗಳ ಸುರಕ್ಷತೆಯ ಬಗ್ಗೆ ಪರೀಶೀಲಿಸಿ ವರಿದಿ ನೀಡುವಂತೆ ಮತ್ತು ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಮೂಲಕ ಅವರ ಶಿಕ್ಷಣ ಮೊಟಕುಗೊಳ್ಳದಂತೆ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ ಅವರು ಎಸ್‌.ಎಸ್‌.ಎಲ್‌.ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಇನ್ನೂ ಉತ್ತಮ ಸಾಧನೆ ಮಾಡುವ ಕುರಿತಂತೆ ಅಧಿಕಾರಿಗಳು ಈಗಿನಿಂದಲೇ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದರು.ಅರಿವು ಮೂಡಿಸಿ :ಪೋಕ್ಸೋ ಕಾಯಿದೆ ಮತ್ತು ಬಾಲ್ಯ ವಿವಾಹ ನಿಷೇಧ ಕುರಿತಂತೆ ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಮೂಡಿಸಬೇಕು, ಕಾರವಾರದಲ್ಲಿ ಬಾಲಕರ ಮಂದಿರ ತೆರೆಯಿರಿ. ಮತ್ತು ರಸ್ತೆಯಲ್ಲಿ ಸಂಚರಿಸುವ ಬೀಡಾಡಿ ದನಗಳ ರಕ್ಷಣೆಗೆ ಗೋಶಾಲೆ ತೆರೆಯುವ ಅಗತ್ಯವಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದುಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಹೇಳಿದರು.

ಆರೋಗ್ಯ ಇಲಾಖೆ ವತಿಯಿಂದ ಕೋವಿಡ್ ಕುರಿತಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಸಿಸೇರಿಯನ್ ಹೆರಿಗೆಗಳ ಸಂಖ್ಯೆ ಅಧಿಕವಾಗಿದೆ. ಸಹಜ ಹೆರಿಗೆಯ ಕುರಿತಂತೆ ಗರ್ಭಿಣಿಯರಿಗೆ ವಿಶೇಷ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆತಿಳಿಸಿದರು. ಜಿಲ್ಲೆಯ ಅಭಿವೃಧ್ದಿಯ ದೃಷ್ಠಿಯಿಂದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಹಕಾರ ಮತ್ತು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆಸುಷ್ಮಾ ತಿಳಿಸಿದರು.ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ , ಎಸ್ಪಿ ಎಂ.ನಾರಾಯಣ್, ಎಡಿಸಿ ಸಾಜಿದ್ ಮುಲ್ಲಾ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.