ವಿಜಯಪುರ: ಜಿಲ್ಲೆಯಾದ್ಯಂತ ಟಿಡಿ-ಡಿಪಿಟಿ ಲಸಿಕೆ ಅಭಿಯಾನಕ್ಕೆ ಚಾಲನೆ

ಲೋಕದರ್ಶನ ವರದಿ

ವಿಜಯಪುರ 11; ಜಿಲ್ಲೆಯಾದ್ಯಂತ ಇದೇ ಡಿಸೆಂಬರ್ 31ರವರೆಗೆ ಮಕ್ಕಳಿಗೆ ಟಿಡಿ ಹಾಗೂ ಡಿಪಿಟಿ ಲಸಿಕೆ ಹಾಕುವ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲ ಮಕ್ಕಳ ಪಾಲಕರು ತಪ್ಪದೇ ತಮ್ಮ ಮಕ್ಕಳಿಗೆ ಈ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮನವಿ ಮಾಡಿಕೊಂಡಿದ್ದಾರೆ.

ನಗರದ  ಸಿಕ್ಯಾಬ್ ಸಂಸ್ಥೆಯಲ್ಲಿ  ಟಿಡಿ ಮತ್ತು ಡಿಪಿಟಿ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಭವಿಷ್ಯದ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಈ ಅಭಿಯಾನ ಆರಂಭಿಸಿದ್ದು, ಮಕ್ಕಳಿಗೆ ಲಸಿಕೆ ಹಾಕುವುದರಿಂದ ಯಾವುದೇ ರೀತಿಯ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ. ಕಾರಣ ನಿಗದಿ ಪಡಿಸಿದ ವಯೋಮಾನದ ಮಕ್ಕಳಿಗೆ ವಿಶೇಷವಾಗಿ 5 ರಿಂದ 6 ವರ್ಷದ ಮಕ್ಕಳಿಗೆ  ಡಿಪಿಟಿ (ಡಿಫ್ತೇರಿಯಾ ಪಟರ್ೋಸಿಸ್ ಟಿಟಾನಸ್) ಲಸಿಕೆಯನ್ನು ತಪ್ಪದೇ ಹಾಕಿಸಬೇಕು. ಅದರಂತೆ 6 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಟಿಟಾನಸ್ ಮತ್ತು ಡಿಫ್ತೇರಿಯಾ ಲಸಿಕೆಯನ್ನು ತಪ್ಪದೇ ಹಾಕಿಸುವಂತೆ ಅವರು ಕರೆ ನೀಡಿದ್ದಾರೆ. 

ರಾಜ್ಯದ 9 ಜಿಲ್ಲೆಗಳಲ್ಲಿ ಅಧ್ಯಯನ ನಡೆಸಿ, ಈ ಲಸಿಕಾ ಅಭಿಯಾನವನ್ನು ಆಯೋಜಿಸಲು ಸರ್ಕಾರ ನಿರ್ದೇಶನ ನೀಡಿದ್ದು, ಡಿಸೆಂಬರ್ 31ರವರೆಗೆ ಈ ಅಭಿಯಾನ ನಡೆಯಲಿದೆ. ಆಯಾ ಶಾಲಾ ಶಿಕ್ಷಕರು ಹಾಗೂ ಸಂಬಂಧಪಟ್ಟ ವೈದ್ಯಾಧಿಕಾರಿಗಳು ಯಾವುದೇ ಮಗು ಈ ಲಸಿಕೆಯಿಂದ ವಂಚಿತವಾಗದಂತೆ ಎಚ್ಚರಿಕೆ ವಹಿಸಬೇಕು. ಆಯಾ ಶಾಲಾ ಮುಖ್ಯೋಪಾಧ್ಯಾಯರು ಕೂಡ ಈ ಕುರಿತಂತೆ ಮೇಲ್ವಿಚಾರಣೆ ನಡೆಸುವಂತೆ ಅವರು ಸಲಹೆ ನೀಡಿದರು. 

ಕಾರ್ಯಕ್ರಮದಲ್ಲಿ ಅಜೀಮ ಇನಾಂದಾರ ಅವರು ಮಾತನಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಮಹಾನಗರ ಪಾಲಿಕೆ ಸದಸ್ಯರಾದ ಅಬ್ದುಲರಜಾಕ ಹೊತರ್ಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪ್ಸೆ, ಪೀಟರ್ ಅಲೆಕ್ಸಾಂಡರ್,  ಅಕ್ರಮ ಮಾಶ್ಯಾಳಕರ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಸಂಪತ್ ಗುಣಾರಿ, ತಾಲೂಕಾ ಆರೋಗ್ಯ ಅಧಿಕಾರಿ ಡಾ.ಕವಿತಾ, ಡಾ.ಜಿನತುನ್ನೀಸಾ, ಸೇರಿದಂತೆ ಇತರರು ಉಪಸ್ಥಿತರಿದ್ದರು. 

ಪ್ರಾರಂಭದಲ್ಲಿ ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್.ಬಾಗವಾನ್ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ ಅವರು ಕಾರ್ಯಕ್ರಮ ನಿರ್ವಹಿಸಿದರು.