ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾಕ್ಕೆ ಸಿ.ಎಸ್‌.ಶಿವನಗೌಡ್ರ ಚಾಲನೆ

World Day Against Child Labor: C.S. Sivanagoudra launches awareness march

ಗದಗ 11:  ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್‌.ಶಿವನಗೌಡ್ರ ಅವರು ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಜಿಲ್ಲಾ ಕಾನೂನು ಸೇವಾ ಪ್ರಾದಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಕ್ಷಣ ಇಲಾಖೆ, ಪೊಲೀಸ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಗದಗ ಬೆಟಗೇರಿ ನಗರಸಭೆ ಆವರಣದಲ್ಲಿ  ಜಾಥಾ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.  

ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ 1986 ತಿದ್ದುಪಡಿ 2016 ರ ಕಾಯ್ದೆಯ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರೆಲ್ಲರೂ ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣ ನಿಯಂತ್ರಣಕ್ಕೆ ಕೈಜೋಡಿಸಬೇಕೆಂದರು.  ಈಗಾಗಲೇ ಸರ್ಕಾರದಿಂದ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿಷೇಧಿಸಲಾಗಿದೆ. 14 ವರ್ಷದೊಳಗಿನ ಮಕ್ಕಳು ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡಿಸಿಕೊಳ್ಳುವುದು ಮತ್ತು 14 ವರ್ಷ ಮೇಲ್ಪಟ್ಟ 18 ವರ್ಷದೊಳಗಿನ ಕಿಶೋರ ಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಅಪರಾಧಕ್ಕೆ 50,000 ರೂ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದರು. 

ಕಟ್ಟಡ ಕಾರ್ಮಿಕರು, ಮಾಲೀಕರು, ವಿವಿಧ ಸಂಸ್ಥೆಗಳ ಮುಖ್ಯಸ್ಥರು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದನ್ನು ಸಂಪೂರ್ಣವಾಗಿ ಬಿಡಬೇಕು. ಬಾಲ ಕಾರ್ಮಿಕರಿಗೆ ಸರ್ಕಾರದ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕಾರ್ಮಿಕ ಸಂಘಟನೆ ಮುಖಂಡರು ಸೇರಿದಂತೆ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.  

ಬನ್ನಿ ಬಾಲ ಕಾರ್ಮಿಕರನ್ನು ದುಡಿತದಿಂದ ಬಿಡಿಸೋಣ. ಬನ್ನಿ ಮಕ್ಕಳ ಬಾಲ್ಯವನ್ನು ರಕ್ಷಿಸಿ ಬೆಳೆಸಲು ಬದ್ಧರಾಗೋಣ.ಶಿಕ್ಷಣವೇ ಶಕ್ತಿ ಬಾಲ ದುಡಿಮೆಗೆ ಮುಕ್ತಿ ಎಂಬ ಘೋಷವಾಕ್ಯಗಳ ಮೂಲಕ ಜನಜಾಗೃತಿ ಜಾಥಾವು ನಗರಸಭೆ ಆವರಣದಿಂದ ಮುಂದೆ ಸಾಗಿ ಗಾಂಧಿ ವೃತ್ತ ಮಾರ್ಗವಾಗಿ ವಿವಿಧ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.  

ಈ ಸಂದರ್ಭದಲ್ಲಿ  ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಸಂದೇಶ ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು , ಸಿಬ್ಬಂದಿಗಳು ಹಾಜರಿದ್ದರು.